ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳ ನಿರ್ದೇಶನ ಮತ್ತು ಮಾನ್ಯ ಜಿಲ್ಲಾಧಿಕಾರಿಗಳ ಸಲಹೆಯಂತೆ ಇಂದು (ಆಗಸ್ಟ್ 05) ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ, ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಆಗಸ್ಟ್ 11 (ಬುಧವಾರ) ರಿಂದ ಕೋವಿಡ್ ಶಿಷ್ಟಾಚಾರದೊಂದಿಗೆ ಮರುಪ್ರಾರಂಭಿಸಲು ನಿರ್ಧರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯನ್ನು ವಿವಿ ಕಾಲೇಜಿನ ವೆಬ್ಸೈಟ್ ಮೂಲಕ ತಿಳಿಸಲಾಗುವುದು. ವಾಹನ ಸೌಲಭ್ಯ ಅಥವಾ ಕೊವಿಡ್ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ಆಗಸ್ಟ್ 2ರಿಂದ ಆರಂಭವಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ದಿಢೀರನೆ ಮುಂದೂಡಲಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ಅನನುಕೂಲವಾಗಿತ್ತು. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿಯೋಗವೊಂದು ಬುಧವಾರ ಕುಲಪತಿಗಳನ್ನು ಭೇಟಿ ಮಾಡಿ ಶೀಘ್ರವೇ ಪರೀಕ್ಷೆಗಳನ್ನು ಪುನರಾರಂಭಿಸಿ ಪೂರ್ಣಗೊಳಿಸುವಂತೆ ಆಗ್ರಹಿಸಿತ್ತು.
ಇದಕ್ಕೆ ಉತ್ತರವಾಗಿ ಕುಲಪತಿಗಳಾದ ಪ್ರೊ. ಪಿ. ಎಸ್. ಯಡಪಡಿತ್ತಾಯ ಅವರು, ಜಿಲ್ಲಾಧಿಕಾರಿಗಳ ನಿರ್ದೇಶನಕ್ಕೆ ಬದ್ಧವಾಗಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಿಗೆ ಅನುಸಾರ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು ಎಂದು ತಿಳಿಸಿದರು. ಬಳಿಕ, ಈ ದಿನವೇ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಅನುವು ಮಾಡಿಕೊಡುವಂತೆ ವಿವಿ ಕುಲಸಚಿವರ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿಗಳನ್ನು ನಿನ್ನೆಯೇ ಭೇಟಿ ಮಾಡಿ ಮನವಿ ಮಾಡುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ