ಪುತ್ತೂರು: ಯಾವುದೇ ಒಂದು ವಿಭಾಗ ಬೆಳೆಯಲು ಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮ, ಉತ್ಸಾಹ ಹಾಗೂ ಭಾಗವಹಿಸುವಿಕೆ ಕೂಡ ಮುಖ್ಯವಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ.ಆರ್ ನಿಡ್ಪಳ್ಳಿ ಹೇಳಿದರು.
ಅವರು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಮಣಿಕರ್ಣಿಕ ಮಾತುಗಾರರ ವೇದಿಕೆಯ, ಅಧ್ಯಕ್ಷತೆ ವಹಿಸಿ ‘ಪದವಿ ದಿನಗಳು’ ಎಂಬ ವಿಷಯದ ಕುರಿತಾಗಿ ಶುಕ್ರವಾರ ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಭಾಗದ ಉಪನ್ಯಾಸಕಿ ಸೀಮಾ ಪೋನಡ್ಕ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಸಿಕ್ಕಿದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಬೆಳೆಯಬೇಕು ಎಂದು ನುಡಿದರು.
ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗೆಳೆತನ ಎನ್ನುವುದು ಒಂದು ಭಾಗ. ಆದರೆ ಶಿಕ್ಷಣ ಎನ್ನುವುದು ಸಾಧನೆಯ ಒಂದು ಅಂಗ. ಮೊದಲು ಸಾಧನೆ ಕಡೆಗೆ ಗಮನಹರಿಸಬೇಕು ಎಂದರು.
ಈ ಮಾತುಗಾರರ ವೇದಿಕೆಯಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಣಿಕರ್ಣಿಕ ಮಾತುಗಾರರ ವೇದಿಕೆಯ ಕಾರ್ಯದರ್ಶಿ ಸೌಜನ್ಯ ಬಿ ಎಂ ಕೆಯ್ಯೂರು, ನೂತನ ಕಾರ್ಯದರ್ಶಿಗಳಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ವಿಭಾಗದ ಹಿರಿಯ ವಿದ್ಯಾರ್ಥಿಗಳು ಮತ್ತು ಪದವಿ ಪತ್ರಿಕೋದ್ಯಮದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆಶಾ ಮಯ್ಯ ಸ್ವಾಗತಿಸಿ, ಕೃತಿಕಾ ಸದಾಶಿವ ವಂದಿಸಿದರು. ತನುಶ್ರೀ ಬೆಳ್ಳಾರೆ ಕಾರ್ಯಕ್ರಮವನ್ನು ನಿರೂಪಿಸಿದರು.
(ಉಪಯುಕ್ತ ನ್ಯೂಸ್)