ಉಜಿರೆ: "ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹಾಗೂ ಪರಿಕಲ್ಪನೆಗಳೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ. ಹಾಗಾಗಿ ಅದಕ್ಕೆ ಪೂರಕವಾಗಿ ನೂತನ ಶಿಕ್ಷಣ ನೀತಿಯೂ ಇರಲಿದೆ" ಎಂದು ಉಜಿರೆಯ ಎಸ್ಡಿಎಂ ಪದವಿ ಕಾಲೇಜಿನ ಕಲಾ ವಿಭಾಗದ ಪ್ರಾಧ್ಯಾಪಕ ಡಾ.ಜಯಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.
ಇವರು ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಕಾಲೇಜಿನ ಚಟುವಟಿಕೆಗಳು ಮತ್ತು ನೂತನ ಶಿಕ್ಷಣ ನೀತಿಯ ಕುರಿತಾದ ಪ್ರಶಿಕ್ಷಣ ಕಾರ್ಯಕ್ರಮದಲ್ಲಿ ಮಾತನಾಡಿದರು.
"ಎಸ್ಡಿಎಂ ಕಾಲೇಜು ಅವಕಾಶಗಳ ಸಾಗರವಾಗಿದ್ದು ಇಂದು ಶಿಕ್ಷಣ ನೀತಿಯಲ್ಲಿ ಆಗಿರುವ ಹಲವಾರು ಬದಲಾವಣೆಗಳನ್ನು ಅಗತ್ಯತೆಗಳಿಗೆ ತಕ್ಕಂತೆ ವರ್ಷಗಳಿಂದ ಪಾಲಿಸುತ್ತಾ ಬಂದಿದೆ. ಶಿಕ್ಷಣಕ್ಕೆ ಅನುಕೂಲಕರವಾದಂತಹ ವಾತಾವರಣವನ್ನು ಮತ್ತು ಸೌಲಭ್ಯಗಳನ್ನು ಸೃಷ್ಟಿಸುತ್ತಿದೆ. ವಿದ್ಯಾರ್ಥಿಗಳು ನೂತನ ಶಿಕ್ಷಣ ನೀತಿಯಿಂದ ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೇ ಕಲಿಕೆಯಲ್ಲಿ ಉತ್ಸಾಹವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ನಡೆಯುವ ಕ್ರೀಡೆ, ಎನ್ಎಸ್ಎಸ್, ಎನ್ ಸಿ ಸಿ ಹಾಗೂ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಜಿ. ಆರ್. ಭಟ್ , ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಡಾ. ಲಕ್ಷ್ಮಿನಾರಾಯಣ ಕೆ.ಎಸ್., ಕ್ರೀಡಾ ವಿಭಾಗದ ಮುಖ್ಯಸ್ಥ ರಮೇಶ್. ಹೆಚ್ ಮತ್ತಿತರು ಉಪಸ್ಥಿತರಿದ್ದರು. ಪ್ರಥಮ ಪದವಿಯ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ರಾಜಶೇಖರ್ ಹಳೆಮನೆ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ