ದ.ಕ ಜಿಲ್ಲಾ ಕಸಾಪದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಕನ್ನಡ ಭವನವನ್ನು ಒದಗಿಸಲು ಕಾರ್ಯಾರಂಭಿಸುವುದಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ನ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಅವರು ಇಂದು ನಗರದ ಎಸ್ಡಿಎಂ ಕಾನೂನು ಮಹಾ ವಿದ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪದಗ್ರಹಣ ಮಾಡಿ ಮಾತನಾಡಿದರು.
ತಾವು ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ತಮ್ಮ ಅಧಿಕಾರಾವಧಿಯಲ್ಲಿ ಈಡೇರಿಸುವುದಾಗಿ ಪುನರುಚ್ಚರಿಸಿದ ಅವರು, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ನ ಗ್ರಂಥಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಅವರು ಕನ್ನಡದ ಬಾವುಟವನ್ನು ನೀಡುವ ಮೂಲಕ ಡಾ. ಎಂ.ಪಿ ಶ್ರೀನಾಥ್ ಅವರಿಗೆ ಕಸಾಪ ಜಿಲ್ಲಾಧ್ಯಕ್ಷರಾಗಿ ಅಧಿಕಾರವನ್ನು ಹಸ್ತಾಂತರಿಸಿದರು.
ನಿಕಟಪೂರ್ವ ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾಗಿದ್ದ ಪ್ರದೀಪ್ ಕುಮಾರ್ ಕಲ್ಕೂರ ಅವರ ಅಧಿಕಾರಾವಧಿ ಮುಗಿದ ಬಳಿಕ ಈ ಹುದ್ದೆಯ ಪ್ರಭಾರಿಯಾಗಿ ಜಿ. ರಾಜೇಶ್ ನೇಮಕಗೊಂಡಿದ್ದರು.
Post a Comment