ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿವಿ ಸಸ್ಯಶಾಸ್ತ್ರ ಉಪನ್ಯಾಸಕರ ಸಂಘ ‘ವನಶ್ರೀ’ಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿಯ ಸಸ್ಯಶಾಸ್ತ್ರ ವಿಷಯದ ಎನ್ಇಪಿ ಪಠ್ಯಕ್ರಮದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಎಂಜಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಉಷಾರಾಣಿ ಎಸ್. ಸುವರ್ಣ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಸ್ಯಶಾಸ್ತ್ರ ವಿಷಯದ ಪಠ್ಯಕ್ರಮದಲ್ಲಿ ಹೊಸ ಕೌಶಲ್ಯಗಳನ್ನು ಆಳವಡಿಸುವುದರ ಮೂಲಕ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳಿಗೆ ತೆರದುಕೊಳ್ಳಲು ಸಾಧ್ಯವಾಗುತ್ತದೆ. ಚಟುವಟಿಕೆ ಭರಿತ ಪಠ್ಯಕ್ರಮ ವಿದ್ಯಾರ್ಥಿಗಳಲ್ಲಿ ಆಸಕ್ತಿಯನ್ನು ತರಿಸಿ, ವಿಷಯದಲ್ಲಿ ಹೆಚ್ಚು ಪ್ರೌಢಿಮೆ ಮೂಡಿಸುತ್ತದೆ ಎಂದರು.
ಉಜಿರೆ ಎಸ್ಡಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕುಮಾರ್ ಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಸ್ಯಶಾಸ್ತ್ರ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಕೌಶಲ್ಯವನ್ನು ನೀಡುವುದರ ಜತೆಗೆ, ಇಲ್ಲಿನ ವಿಫುಲ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಕೆಲಸವಾಗಬೇಕು ಎಂದರು.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಸಭಾಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಸುಕೇಶ್ ಹಾಗೂ ಡಾ.ರಾಘವೇಂದ್ರ ರಾವ್ ಭಾಗವಹಿಸಿದರು. ಈ ಸಂದರ್ಭ, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಪ್ರಸನ್ನ ರೈ ಅವರನ್ನು ಸನ್ಮಾನಿಸಲಾಯಿತು. ಮಡಿಕೇರಿ ಎಫ್ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ , ಪ್ರಸನ್ನ ರೈ ಯವರ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಮಂಗಳೂರು ವಿವಿಗೆ ಒಳಪಟ್ಟ ಕಾಲೇಜುಗಳಿಂದ 30 ಜನ ಸಸ್ಯಶಾಸ್ತ್ರ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿವಿ ಕಾಲೇಜಿನ ಡಾ. ಸಿದ್ಧರಾಜು ಎಂ.ಎನ್ ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ರಮದ ಸಂಯೋಜಕಿ, ಆಳ್ವಾಸ್ ಕಾಲೇಜಿನ ವಿಜ್ಞಾನ ನಿಖಾಯದ ಡೀನ್ ರಮ್ಯಾ ರೈ ಪಿ.ಡಿ ಸ್ವಾಗತಿಸಿ, ವಿವಿ ಕಾಲೇಜಿನ ಡಾ.ಶೋಭಾ ವಂದಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ