ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ಸಂಪೂರ್ಣವಾಗಿ ಹಾಗೂ ಕಡ್ಡಾಯವಾಗಿ ಪ್ಲಾಸ್ಟಿಕ್ ನಿಷೇಧಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತ ಡಾ.ಆರ್ ವಿಶಾಲ್ ಸುತ್ತೋಲೆ ಹೊರಡಿಸಿದ್ದು "ಶಾಲೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್, ಭಿತ್ತಿಪತ್ರ, ಲೋಟ, ಚಮಚವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಇದು ಮಕ್ಕಳ ಆರೋಗ್ಯದ ಮೇಲೆ ಮಾತ್ರವಲ್ಲದೆ, ತಾವು ಕಲಿಯುವ ಪರಿಸರದ ಮೇಲೂ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ " ಎಂದು ಹೇಳಿದರು.
ಶಾಲಾ ಹಾಗೂ ಇಲಾಖಾ ಕಚೇರಿಗಳಿಗೆ ಶಿಕ್ಷಣ ಸಚಿವರು ಭೇಟಿ ನೀಡಿದಾಗ ಗೌರವಾರ್ಥವಾಗಿ ಪ್ಲಾಸ್ಟಿಕ್ ನಿಂದ ಸುತ್ತಿದ ಹೂಗುಚ್ಛ ಸೇರಿದಂತೆ ಇತರ ವಸ್ತುಗಳನ್ನು ನೀಡಲಾಗುತ್ತಿತ್ತು. ಇದಕ್ಕೆ ಸಚಿವರು ಕೂಡ ಬೇಸರ ವ್ಯಕ್ತಪಡಿಸಿದ್ದರು. ನಮ್ಮ ದೇಶ ಪ್ಲಾಸ್ಟಿಕ್ ಮುಕ್ತವಾಗಬೇಕಾದರೆ ಮೊದಲಿಗೆ ಹೀಗೆ ಶಾಲಾ ಪರಿಸರ, ಮನೆಯ ಪರಿಸರದ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಇನ್ನು ಮುಂದೆ ರಾಜ್ಯದ ಯಾವುದೇ ಶಾಲೆಗಳಲ್ಲಿ ಪ್ಲಾಸ್ಟಿಕ್ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಡಾ. ಆರ್ ವಿಶಾಲ್ ಎಚ್ಚರಿಕೆ ನೀಡಿದರು.