|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಉಡುಪಿ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಉಡುಪಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ (ಸ್ಥಳೀಯ ಪ್ರಾಧಿಕಾರ ಕ್ಷೇತ್ರ) ನಡೆಸಲು ಮಾನ್ಯ ಚುನಾವಣಾ ಆಯೋಗವು ಉದ್ದೇಶಿಸಿದ್ದು, ಸದರಿ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು  ಮಾನ್ಯ ಚುನಾವಣಾ ಆಯೋಗವು ಉಲ್ಲೇಖ (1) ರಂತೆ ವೇಳಾಪಟ್ಟಿ ಪ್ರಕಟಿಸಿರುತ್ತದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ದಿನಾಂಕ 10-12-2021 ರಂದು ಮತದಾನ ನಡೆಯಲಿದ್ದು, ಈ ಚುನಾವಣೆಗೆ ಸಂಬಂಧಿಸಿದಂತೆ  ಮತದಾನ ದಿನದಂದು ಮತಗಟ್ಟೆಯ ಸುತ್ತಮುತ್ತ ಶಾಂತಿ ಭಂಗವನ್ನು ಉಂಟು ಮಾಡುವ ಸಾಧ್ಯತೆಗಳಿದ್ದು, ಅಹಿತಕರ ಘಟನೆಗಳು ಉಂಟಾಗುವ ಸಂಭವಗಳಿರುವುದರಿಂದ, ಮತದಾನ ಜರುಗುವ ದಿನದಂದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಶಾಂತ ಮತ್ತು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸುವ ಅಗತ್ಯತೆ ಇರುತ್ತದೆ.


ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಸಿ.ಆರ್.ಪಿ.ಸಿ.ಕಲಂ  144ರನ್ವಯ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು  ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸುವ ಬಗ್ಗೆ ಉಡುಪಿ ಜಿಲ್ಲೆಯಾದ್ಯಂತ ನಿಷೇದಾಜ್ಷೆಯನ್ನು ಜಾರಿ ಮಾಡುವ ಅವಶ್ಯಕತೆ ಇದೆ ಎಂದು ಕಂಡು ಬಂದಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದೆ.


ಆದೇಶ


ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಅನುಸಾರ ಉಡುಪಿ ಜಿಲ್ಲೆಯ ಭಾ.ಆ.ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾ ರಾವ್‌ ಎಂ ಅವರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ವಿಧಾನ ಪರಿಷತ್ತಿನ  ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಗಳ ಚುನಾವಣೆ-2021 ರ ಪ್ರಯುಕ್ತ ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ನಡೆಯಲು ಅನುಗುಣವಾಗುವಂತೆ  ದಿನಾಂಕ:07-12-2021 ರ ಸಂಜೆ  04-00 ಗಂಟೆಯಿಂದ ದಿನಾಂಕ:10.12.2021ರ ಸಂಜೆ 4.00 ಗಂಟೆಯವರೆಗೆ ಉಡುಪಿ ಜಿಲ್ಲೆಯಾದ್ಯಂತ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತಾರೆ.


ಸದ್ರಿ ಅವಧಿಯಲ್ಲಿ:


1) ಈ ಅವಧಿಯಲ್ಲಿ  ಕಾನೂನು ಬಾಹಿರವಾಗಿ ಗುಂಪು ಗೂಡುವುದನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.


2) ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ  ವ್ಯಕ್ತಿಗಳು ಗುಂಪುಗೂಡಲು /ಒಟ್ಟಾಗಿ ಓಡಾಡಲು ಅನುಮತಿ ನೀಡುವುದಿಲ್ಲ. ಆದಾಗ್ಯೂ, ಬಾಗಿಲಿನಿಂದ ಬಾಗಿಲಿಗೆ ಮತ ಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಭೇಟಿ ನೀಡುವುದಕ್ಕೆ ನಿರ್ಭಂಧ ಇರುವುದಿಲ್ಲ.


3) ಹೊರಗಿನ ಮತಕ್ಷೇತ್ರದಿಂದ ಕರೆತಂದ ಮತ್ತು ಈ ಕ್ಷೇತ್ರದ ಮತದಾರರಲ್ಲದೇ ಇರುವ ವ್ಯಕ್ತಿಗಳು ಹಾಗೂ ಮುಂತಾದ ಅನುಮಾನಸ್ಪದ ವ್ಯಕ್ತಿಗಳ ಚಲನವಲನಗಳ ಬಗ್ಗೆ ತೀವ್ರ ನಿಗ ವಹಿಸುವುದು. ಇಂತಹ ವ್ಯಕ್ತಿಗಳಿಂದ ಮತದಾರರನ್ನು ಪ್ರಭಾವ ಬೀರುವ ಚಟುವಟಿಕೆಗಳು ಕಂಡುಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು.


ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ. ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಅಧಿಕಾರಿ/ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ  ಸ್ಥಳಕ್ಕೆ ಅನ್ವಯಿಸುವುದಿಲ್ಲ.   

ಈ ಆದೇಶವನ್ನು ದಿನಾಂಕ:07-12-2021 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವಹಸ್ತ ಸಹಿ ಮತ್ತು ಮುದ್ರೆಯೊಂದಿಗೆ ಹೊರಡಿಸಿರುತ್ತಾರೆ.


ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಿಗಳ ವಿಧಾನ ಪರಿಷತ್ತಿನ ದ್ವೈವಾರ್ಷಿಕ 2021 ಚುನಾವಣೆ   ಉಡುಪಿ  ಜಿಲ್ಲೆಯಲ್ಲಿ ನಡೆಯುವ ಮತದಾನ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ದಿನಾಂಕ:09.12.2021 ರ ಸಂಜೆ 5.00 ಗಂಟೆಯಿಂದ ದಿನಾಂಕ: 10.12.2021 ರ ಸಂಜೆ 5.00 ಗಂಟೆಯವರೆಗೆ ಈ ಕೆಳಗಿನಂತೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತಾರೆ.


ಸದ್ರಿ ಆದೇಶದಂತೆ:


1. ಈ ಮತದಾನ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಮತದಾನ ಉದ್ದೇಶದಿಂದ ಮತದಾನ ಕಾರ್ಯಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರೇ ವ್ಯಕ್ತಿಗಳು ಸಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.


2. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ.


3. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ, ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.


ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ.


ಈ ಆದೇಶವನ್ನು ದಿನಾಂಕ: 06.12.2021 ರಂದು ಜಿಲ್ಲಾಧಿಕಾರಿಯವರು ತಮ್ಮ ಸ್ವಹಸ್ತಾಕ್ಷರ ಮತ್ತು ನ್ಯಾಯಾಲಯದ ಮುದ್ರೆಯೊಂದಿಗೆ ಹೊರಡಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم