ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇವರ ಸಹಯೋಗದಲ್ಲಿ, ಶುಕ್ರವಾರ ಅಜ್ಜರಕಾಡು ರೆಡ್ಕ್ರಾಸ್ ಭವನದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಯಿತು.
ಮಾನವ ಹಕ್ಕುಗಳ ಪ್ರೊಟೆಕ್ಷನ್ ಫೌಂಡೇಶನ್ನ ಜಿಲ್ಲಾ ಅಧ್ಯಕ್ಷ ಪ್ರೊ.ಡಾ.ರವೀಂದ್ರನಾಥ ಶ್ಯಾನುಭಾಗ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಕೋವಿಡ್ನಿಂದ ಮೃತಪಟ್ಟ ಆಯ್ದ 5 ಫಲಾನುಭವಿಗಳಿಗೆ ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ಉಡುಪಿ ಘಟಕದ ವತಿಯಿಂದ ನೀಡಲಾದ ದಿನಸಿ ಕಿಟ್ಗಳನ್ನು ವಿತರಿಸಿ, ವಿದ್ಯಾರ್ಥಿ ಪ್ರತಿನಿಧಿಗಳು ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಅದನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನವ ಹಕ್ಕುಗಳ ವ್ಯಾಪ್ತಿ ವಿಶಾಲವಾಗಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ಬದ್ಧವಾಗಿರುವ ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್, ಕಾಲೇಜಿನ ಯೂತ್ ರೆಡ್ಕ್ರಾಸ್ ಸಂಸ್ಥೆಯ ಸಂಚಾಲಕಿ ಶೋಭ ಆರ್, ಡಿಡಿಆರ್ಸಿ ಸಿಬ್ಬಂದಿಗಳು, ರೆಡ್ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಜಿ. ಶಂಕರ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ರೆಡ್ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ ಸ್ವಾಗತಿಸಿ, ಡಿಡಿಆರ್ಸಿ ಘಟಕದ ಉಸ್ತುವಾರಿ ಜಯಶ್ರೀ ಎಸ್ ನಿರೂಪಿಸಿ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ ವಂದಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment