ಮೂಡುಬಿದಿರೆ: ಯಾವುದೇ ವಿಷಯವನ್ನು ಸುಲಭವಾಗಿ ತೆಗೆದುಕೊಳ್ಳವುದರ ಬದಲು ಸವಾಲಿನಂತೆ ಸ್ವೀಕರಿಸಬೇಕು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ ಆಳ್ವ ಹೇಳಿದರು.
ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ನಡೆದ "ಇನಾಮು - 2022" ಅಂತರ್ ಫೋರಂ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ ಫೋರಂಗಳು ನಾಯಕತ್ವ ಗುಣವನ್ನು ಬೆಳೆಸುತ್ತದೆ, ಸಿಗುವಂತಹ ಅವಕಾಶಗಳನ್ನು ಸವಾಲಿನಂತೆ ಸ್ವೀಕರಿಸಿ ಕಾರ್ಯಪ್ರವೃತ್ತರಾಗಬೇಕು. ನಮ್ಮೊಳಗಿರುವ ಪ್ರೇರಣೆಯು ಬೇರೆಯವರನ್ನು ಅನುಕರಿಸಿದ ಅಲ್ಪಕಾಲಿಕ ಪ್ರೇರಣೆಯಂತಾಗಬಾರದು. ಆಯೋಜನೆಗೊಂಡಿರುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸಲು ಫೋರಂಗಳು ಸೂಕ್ತವಾದ ವೇದಿಕೆ. ಕಾಲೇಜು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಗುರು-ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೊಳಕೆಯೊಡೆದ ಸಸಿಗಳಿಗೆ ನೀರೆರೆಯುವ ಮೂಲಕ ವಿವಿಧ ಫೋರಂ ಚಟುವಟಿಕೆಗಳನ್ನು ಉದ್ಘಾಟಿಸಲಾಯಿತು. 23 ಫೋರಂಗಳ 2022ನೇ ಶೈಕ್ಷಣಿಕ ವರ್ಷದ 25 ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ಫೋರಂ ಸಂಯೋಜಕರಾದ ಡಾ. ಯೋಗೀಶ್ ಕೈರೋಡಿ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಹರಿಣಾಕ್ಷಿ, ವಿದ್ಯಾರ್ಥಿ ಸಂಯೋಜಕ ವೈಶಾಖ್ ಭಂಡಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿ ವಾಲಿನ್ ಡಿಸೋಜ ಸ್ವಾಗತಿಸಿ, ವಿದ್ಯಾರ್ಥಿ ಅಭಿಷೇಕ್ ವಂದಿಸಿದರು. ವಿದ್ಯಾರ್ಥಿನಿ ಶ್ರೀಶಕ್ತಿ ಶೆಟ್ಟಿ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ