|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಗಲಿದ ಚೇತನ ಉರಿಮಜಲು ರಾಮ ಭಟ್ ಅವರಿಗೆ ವಿವೇಕಾನಂದ ಸಂಸ್ಥೆಗಳಿಂದ ಶ್ರದ್ಧಾಂಜಲಿ

ಅಗಲಿದ ಚೇತನ ಉರಿಮಜಲು ರಾಮ ಭಟ್ ಅವರಿಗೆ ವಿವೇಕಾನಂದ ಸಂಸ್ಥೆಗಳಿಂದ ಶ್ರದ್ಧಾಂಜಲಿ

 

ಪುತ್ತೂರು ಡಿ. 7: ಸೋಮವಾರ ನಿಧನರಾದ, ದಕ್ಷಿಣಕನ್ನಡದಲ್ಲಿ ಜನಸಂಘ ಹಾಗೂ ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾದ ಪುತ್ತೂರಿನ ಮಾಜಿ ಶಾಸಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಸ್ಥಾಪಕರಲ್ಲಿ ಓರ್ವರಾದ ಉರಿಮಜಲು ರಾಮ ಭಟ್ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಪೂರ್ವಾಹ್ನ 9.45ರ ಸುಮಾರಿಗೆ ಕಾಲೇಜಿನ ಪ್ರಾಂಗಣದಲ್ಲಿ ಏರ್ಪಾಡು ಮಾಡಲಾಗಿತ್ತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಬಲರಾಮ ಆಚಾರ್ಯ ವಿವೇಕಾನಂದ ಸಂಸ್ಥೆಗಳ ಪರವಾಗಿ ನುಡಿನಮನ ಸಲ್ಲಿಸಿದರು.


ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್, ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ನಿರ್ದೇಶಕರು, ಸದಸ್ಯರು, ವಿವೇಕಾನಂದ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಮತ್ತು ಪುತ್ತೂರಿನ ಅನೇಕ ಗಣ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.


ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಭೆ:


ಉರಿಮಜಲು ರಾಮಭಟ್ ಅವರಿಗೆ ವಿವೇಕಾನಂದ ಮಹಾವಿದ್ಯಾಲಯದ ವತಿಯಿಂದ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ವಿಧಾನ ಪರಿಷತ್‌ನ ಸದಸ್ಯ ಎಸ್.ಎಲ್. ಬೋಜೇಗೌಡ ಮಾತನಾಡಿ, ಹಲವು ಕ್ಷೇತ್ರಗಳಿಗೆ ವಿದ್ಯಾರ್ಥಿಗಳನ್ನು ಕೊಡುಗೆಯಾಗಿ ನೀಡಿದ ಶ್ರೇಯ ರಾಮ ಭಟ್ಟರಿಗೆ ಸಲ್ಲಬೇಕು. ಅವರ ನೀಡಿದ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ವಿದ್ಯಾರ್ಥಿಗಳು ಮಾಡಬೇಕು. ಶಿಕ್ಷಣ ಕ್ರಾಂತಿಗೆ ಕಾರಣರಾಗಬೇಕು ಎಂದರು.


ಉತ್ತಮ ವ್ಯಕ್ತಿಗಳನ್ನು, ವ್ಯಕ್ತಿತ್ವಗಳನ್ನು ರೂಪಿಸುವಲ್ಲಿ ವಿವೇಕಾನಂದ ವಿದ್ಯಾ ಸಂಸ್ಥೆಗಳ ಕೊಡುಗೆ ಅಪಾರ. ಇಂತಹ ಒಂದು ಶ್ರೇಷ್ಠ ವಿದ್ಯಾ ಸಂಸ್ಥೆಯ ಹುಟ್ಟಿಗೆ ಕಾರಣವಾದ ರಾಮ ಭಟ್ಟರಾದಿಯಾಗಿ ಎಲ್ಲಾ ಹಿರಿಯರಿಗೆ ನಾನು ಆಭಾರಿ ಎಂದು ರಾಮಭಟ್ಟರೊಂದಿಗಿನ ಒಡನಾಟವನ್ನು ಸ್ಮರಿಸಿಕೊಂಡರು.


ವಿವೇಕಾನಂದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಮಹಾನ್ ನಾಯಕನನ್ನು ಇಂದು ಕಳೆದುಕೊಂಡಿದ್ದೇವೆ. ಅವರು ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಿಕೊಡುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದ್ದಾರೆ. ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಸಮಾಜದ ಬೇರೆ ಬೇರೆ ಆಯಾಮಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿ ಉರಿಮಜಲು ರಾಮ ಭಟ್ ಅವರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಸಿಗುವಂತೆ ಮಾಡುವಲ್ಲಿ ಅವರ ಕೊಡುಗೆ ಅಪಾರ. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.


ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್, ಉರಿಮಜಲು ರಾಮಭಟ್ ಅವರ ಅನನ್ಯ ಕೊಡುಗೆಗಳು ಹಾಗೂ ಆಶಯವನ್ನು ಮೆಲುಕು ಹಾಕಿದರು. ಈ ಸಂದರ್ಭ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉರಿಮಜಲು ಕೆ. ರಾಮ ಭಟ್ ಅವರ ಆಶಯದಂತೆ, ವಿವೇಕಾನಂದ ವಿದ್ಯಾಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ತಾನು ತೀರಿಕೊಂಡಾಗ ವಿದ್ಯಾಸಂಸ್ಥೆಗಳು ರಜೆ ಘೋಷಣೆ ಮಾಡದೆ ಎಂದಿನಂತೆ, ಎಂದಿಗಿಂತಲೂ ಹೆಚ್ಚು ಕೆಲಸ ಮಾಡಬೇಕು ಎಂದು ಅವರೇ ಈ ಹಿಂದೆ ಹೇಳಿದ ಮಾತಿನಂತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳು ನಡೆದುಕೊಂಡು, ಅವರ ಆಶಯವನ್ನು ಗೌರವಿಸಿದವು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم