ಪುತ್ತೂರು ಡಿ. 14: ಉನ್ನತ ಶಿಕ್ಷಣ ಮತ್ತು ಸಂಶೋಧನೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತೆರೆದುಕೊಳ್ಳಬೇಕು. ಸ್ನಾತಕೋತ್ತರ ಅಧ್ಯಯನಕ್ಕೆ ಬಂದ ವಿದ್ಯಾರ್ಥಿಗಳು ರಾಷ್ಟ್ರೀಯ, ಅಂತರರಾಷ್ಟ್ರೀಯ ಜರ್ನಲ್ಗಳಲ್ಲಿ ಸಂಶೋಧನಾ ಅಂಕಣಗಳನ್ನು ಪ್ರಕಟಿಸುವಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಉಪನ್ಯಾಸಕಿ ಡಾ.ಪ್ರೀತಿಕೀರ್ತಿ ಡಿ'ಸೋಜ ಹೇಳಿದರು.
ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ 'ಸಂಶೋಧನಾ ವಿಧಾನ (ರಿಸರ್ಚ್ ಮೆಥೋಡಾಲಜಿ) ಎಂಬ ವಿಷಯದ ಕುರಿತು ಆಯೋಜಿಸಿದ ಎರಡು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಂಗಳವಾರ ಅವರು ಮಾತನಾಡಿದರು.
ಸಂಶೋಧನಾ ಕಾರ್ಯವನ್ನು ಕೇವಲ ಕೆಲವೇ ವಿದ್ಯಾರ್ಥಿಗಳು ಮುಂದುವರೆಸುತ್ತಿದ್ದಾರೆ. ಹೊಸ ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡುವುದು ಸಂಶೋಧನೆಯಾಗಿದೆ. ಸಂಶೋಧನಾ ಕಾರ್ಯ ನಡೆಸುವಾಗ ಹಲವಷ್ಟು ಅಡೆತಡೆಗಳು ಎದುರಾಗುತ್ತದೆ. ಸಮಸ್ಯೆಗಳನ್ನು ಎದುರಿಸಿ ತಮ್ಮ ಗುರಿಯನ್ನು ತಲುಪುವ ಯೋಜನೆಯನ್ನು ವಿದ್ಯಾರ್ಥಿಗಳು ಹಾಕಿಕೊಳ್ಳಬೇಕು. ಒತ್ತಾಯಪೂರ್ವಕವಾಗಿ ಯಾವುದೇ ಕಾರ್ಯವನ್ನು ಮಾಡಬಾರದು. ಏಕಾಗ್ರತೆಯಿಂದ ವಿಷಯಗಳನ್ನು ಅಧ್ಯಯನ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹೆಚ್.ಜಿ ಶ್ರೀಧರ್ ಸ್ವಾಗತಿಸಿ ಪ್ರಸ್ತಾವನೆಗೈದರು. ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿಜಯ ಸರಸ್ವತಿ ವಂದಿಸಿದರು. ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ