ಸಚಿವ ವಿ. ಸುನೀಲ್ ಕುಮಾರ್ ಭಾನುವಾರ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಡಯಾಲಿಸೀಸ್ ಸೆಂಟರ್ ಉದ್ಘಾಟಿಸಿ ಶುಭ ಹಾರೈಸಿದರು.
ಉಜಿರೆ: ಸರ್ಕಾರ ನೀಡುತ್ತಿರುವ ಆರೋಗ್ಯ ಸೇವೆಗೆ ಸಮಾನಾಂತರವಾಗಿ ಧರ್ಮಸ್ಥಳದಂತಹ ಖಾಸಗಿ ಸಂಸ್ಥೆಗಳು ಕೂಡಾ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವುದು ಸ್ತುತ್ಯಾರ್ಹವಾಗಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.
ಅವರು ಭಾನುವಾರ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಉದ್ಘಾಟಿಸಿ ಮಾತನಾಡಿದರು.
ಉಜಿರೆಯಂತಹ ಗ್ರಾಮೀಣ ಪ್ರದೇಶದಲ್ಲಿ ಕಿಡ್ನಿ ಸಮಸ್ಯೆಯಂತಹ ರೋಗಕ್ಕೆ ಚಿಕಿತ್ಸೆ ನೀಡುವುದು ತ್ರಾಸದಾಯಕವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ಸೇವಾ-ಸೌಲಭ್ಯವಿದ್ದರೂ ಖಾಸಗಿ ಸಂಸ್ಥೆಗಳು ಕೂಡಾ ಉತ್ತಮ ಗುಣಮಟ್ಟದ ಸೇವೆಯನ್ನು ಕಡಿಮೆ ವೆಚ್ಚದಲ್ಲಿ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಯ ನೂತನ ವೆಬ್ಸೈಟ್ ಉದ್ಘಾಟಿಸಿದ ಸಚಿವ ಎಸ್. ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳು ತೀರಾ ಗ್ರಾಮೀಣ ಪ್ರದೇಶದಲ್ಲಿದ್ದು ಇಲ್ಲಿ ಹೆಚ್ಚಿನ ಆರೋಗ್ಯ ಸೇವೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ 45 ಡಯಾಲಿಸಿಸ್ ಕೇಂದ್ರಗಳಿದ್ದು ಇನ್ನೂ ಹೆಚ್ಚಿನ ಸೇವೆಯ ಅಗತ್ಯವಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಪ್ರಗತಿಗೆ ಹೆಗ್ಗಡೆಯವರ ಸೇವೆಯನ್ನು ಶ್ಲಾಘಿಸಿ ಅವರು ಅಭಿನಂದಿಸಿದರು.
ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿ, ಕೊರೊನಾ ಪೀಡಿತ ಸಂದರ್ಭದಲ್ಲಿ ಹೆಗ್ಗಡೆಯವರು ಉಜಿರೆಯಲ್ಲಿ ಹಾಗೂ ಧರ್ಮಸ್ಥಳದಲ್ಲಿ ರೋಗಿಗಳ ಶುಶ್ರೂಷೆಗೆ ನೀಡಿದ ಸಹಕಾರವನ್ನು ಧನ್ಯತೆಯಿಂದ ಸ್ಮರಿಸಿ ಅಭಿನಂದಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಧಾರವಾಡದಲ್ಲಿರುವ ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ತಾನು ಅನುಭವ ಮಾಹಿತಿ ಮತ್ತು ಸ್ಪೂರ್ತಿ ಪಡೆದು ಉಜಿರೆಯಲ್ಲಿ ಕೂಡಾ ಹೆಚ್ಚಿನ ಆರೋಗ್ಯ ಸೇವೆ ನೀಡಲು ಸಾಧ್ಯವಾಗಿದೆ. ರೋಗಿಗಳಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಸೇವೆ ನೀಡಲಾಗುತ್ತಿದೆ. ಜೊತೆಗೆ ವಿಮಾ ಸೌಲಭ್ಯವೂ ದೊರಕುತ್ತಿದೆ ಎಂದರು.
ರಾಜ್ಯದ ಇತರ ಜಿಲ್ಲೆಗಳಿಗೂ ಆರೋಗ್ಯ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.
ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಮತ್ತು ಕೆ. ಪ್ರತಾಪ್ಸಿಂಹ ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್, ಡಾ. ಸಂತೋಷ್ ಪೈ, ಶರತ್ಕೃಷ್ಣ ಪಡ್ವೆಟ್ನಾಯ, ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುಷ್ಪಾವತಿ ಆರ್. ಶೆಟ್ಟಿ, ವೈದ್ಯಕೀಯ ಅಧೀಕ್ಷಕ ಡಾ. ರಂಜನ್ ಕುಮಾರ್, ಮುಖ್ಯ ವೈದ್ಯಾಧಿಕಾರಿ ಡಾ. ಸಾತ್ವಿಕ್ ಜೈನ್ ಉಪಸ್ಥಿತರಿದ್ದರು.
ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ನಿರ್ದೇಶಕ ಎಂ, ಜನಾರ್ದನ್ ಧನ್ಯವಾದವಿತ್ತರು. ಹೇಮಾವತಿ ಕಾರ್ಯಕ್ರಮ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ