ಓದುವ ಕಲೆ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೇರಿಸುತ್ತದೆ: ಕೃಷ್ಣ ಮೂರ್ತಿ
ಪುತ್ತೂರು: ಓದುವ ಕಲೆ ವ್ಯಕ್ತಿಯನ್ನು ಉನ್ನತ ಮಟ್ಟಕೇರಿಸುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ವಿದ್ಯಾರ್ಜನೆಯಲ್ಲೇ ಕಳೆಯಬೇಕು. ಸಣ್ಣ ಪೇಪರಿನ ತುಣುಕು ಸಿಕ್ಕಿದರೂ ಹೆಕ್ಕಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಅಂತಹ ವಿದ್ಯಾರ್ಥಿಗಳು ಪರಿಪೂರ್ಣ ಜ್ಞಾನವಂತರಾಗಿ ಹೊರಹೊಮ್ಮಲು ಸಾಧ್ಯ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ಅವರು ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಜ್ಞಾನ ಸಂಪಾದನೆಯನ್ನು ಮಾಡಿ ದೇಶ ಭಕ್ತ ಪ್ರಜೆಗಳಾಗಿ ಹೊರಹೊಮ್ಮ ಬೇಕು. ಆ ನಿಟ್ಟಿನಲ್ಲಿ ಪೂರಕವಾದ ವಾತಾವರಣವನ್ನು ಅಂಬಿಕಾ ಸಂಸ್ಥೆ ಒದಗಿಸುತ್ತದೆ. ಇದರ ಸಂಪೂರ್ಣ ಲಾಭವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದು ನುಡಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಮಾತನಾಡಿ ಕೊರೋನದಿಂದ ಬೇಸೆತ್ತು ಹೋಗಿದ್ದ ಶೈಕ್ಷಣಿಕ ವ್ಯವಸ್ಥೆ ಪುನಃ ಚೇತರಿಸಿಕೊಂಡಿದ್ದು ಮಕ್ಕಳು ಹಾಗೂ ಪೋಷಕರು ಯಾವುದೇ ರೀತಿಯಲ್ಲಿ ಭಯಪಡಬೇಕಾಗಿಲ್ಲ. ಮಕ್ಕಳು ಹೆಚ್ಚಿನ ಆಸಕ್ತಿಯನ್ನು ಕಲಿಕೆಯಲ್ಲಿ ತೋರಿಸಿ ಪೂರ್ಣ ಪ್ರಮಾಣದ ಶ್ರಮವನ್ನು ಹಾಕಿದಾಗ ಉತ್ತಮ ಫಲಿತಾಂಶ ನಿರೀಕ್ಷಿಸಲು ಸಾಧ್ಯ ಎಂದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ಕ್ಯಾಂಪಸ್ ನಿರ್ದೇಶಕ ಭಾಸ್ಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಶಂಕರನಾರಾಯಣ ಭಟ್ ಪ್ರಸ್ತಾವನೆಗೈದರು. ಕಾಲೇಜಿನ ಗಣಿತ ಶಾಸ್ತ್ರ ಉಪನ್ಯಾಸಕ ತಿಲೋಶ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ವಿನುತ ವಂದಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ