ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಫೆ.9ರಿಂದ ಮುಚ್ಚಲ್ಪಟ್ಟಿದ್ದ 9 ಮತ್ತು 10ನೇ ತರಗತಿಗಳು ಸೋಮವಾರದಿಂದ ಎಂದರೆ ಇಂದಿನಿಂದ (ಫೆ.14) ರಾಜ್ಯಾದ್ಯಂತ ಮತ್ತೆ ಆರಂಭಗೊಂಡಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ದ.ಕ., ಉಡುಪಿ, ದಾವಣಗೆರೆ, ಶಿವಮೊಗ್ಗ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳ ಸುತ್ತಮುತ್ತಲೂ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ.
ಸೂಕ್ಷ್ಮ ಪ್ರದೇಶದಲ್ಲಿನ ಶಾಲೆಗಳು ಪೊಲೀಸ್ ಭದ್ರತೆಯೊಂದಿಗೆ ಆರಂಭ
ಪ್ರೌಢಶಾಲೆಗಳಿಗೆ ಭದ್ರತೆ ಕಲ್ಪಿಸುವಂತೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಸ್ತುಸ್ಥಿತಿ ತಿಳಿದುಕೊಳ್ಳುವಂತೆ ಡಿ.ಸಿ.ಗಳು ಮತ್ತು ಎಸ್ಪಿ ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಶಾಂತಿ ಸಭೆಯನ್ನು ನಡೆಸುವಂತೆ ನಿರ್ದೇಶನ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ (ಫೆ.13) ಮಾತನಾಡಿದ ಮುಖ್ಯಮಂತ್ರಿಗಳು, ಶಾಂತಿ - ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುವುದು ಸರಕಾರದ ಮೊದಲ ಆದ್ಯತೆ. ಶಾಲೆಗಳು ಆರಂಭವಾದ ನಂತರದ ಪರಿಸ್ಥಿತಿಯನ್ನು ಗಮನಿಸಿಕೊಂಡು ಕಾಲೇಜುಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.
ಶಾಂತಿಗೆ ಭಂಗ ತರುವವರ ಮೇಲೆ ನಿಗಾ
ಹಿಜಾಬ್ ವಿಚಾರದಲ್ಲಿ ವಿವಾದವನ್ನು ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ವಹಿಸಲಾಗುತ್ತದೆ. ಸಾಮಾಜಿಕ ತಾಣಗಳಲ್ಲಿ ಪ್ರಚೋದನೆ ನೀಡಿ ಶಾಂತಿ ಕದಡುವವರ ಮೇಲೂ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಲೆಗಳಿಗೆ ಹಿಜಾಬ್, ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟನೆಯನ್ನು ನೀಡಿದೆ. ಅದಕ್ಕೆ ಸರಕಾರ ಕೂಡಾ ಬದ್ಧವಾಗಿದೆ. ಹೈಕೋರ್ಟ್ ಆದೇಶದಂತೆ ಫೆ. 14ರಂದು 9-10ನೇ ತರಗತಿ ಆರಂಭವಾಗುತ್ತವೆ ಎಂದರು. ಯಾವುದೇ ರೀತಿಯ ಗಲಾಟೆ, ಗಲಭೆ ಆಗದಂತೆ ಪೊಲೀಸ್ ಇಲಾಖೆ ನಿಗಾ ವಹಿಸಿದೆ. ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ಪಥಸಂಚನ ನಡೆಸಿದ್ದಾರೆ ಎಂದರು.
ವಿಚಾರಣೆಗೆ ಕ್ಷಣಗಣನೆ
ಹೈಕೋರ್ಟ್ನ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ಹಿಜಾಬ್ ವಿವಾದ ಕುರಿತಂತೆ ಇಂದು (ಫೆ.14, ಸೋಮವಾರ) ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದುವರಿಯಲಿದೆ.
ಪಿಯು, ಪದವಿ ಕಾಲೇಜು ಆರಂಭದ ಬಗ್ಗೆ ಇಂದು ಸಭೆ
ಪ್ರೌಢಶಾಲೆ ಆರಂಭವಾದ ನಂತರದ ಪರಿಸ್ಥಿತಿ ಬಗ್ಗೆ ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆಯನ್ನು ಕೈಗೊಳ್ಳಲಿದ್ದಾರೆ. ಇದರಲ್ಲಿ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಾಲೇಜುಗಳನ್ನು ಆರಂಭಿಸುವ ಮನಃಸ್ಥಿತಿ ಸರಕಾರದ್ದಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿಷೇಧಾಜ್ಞೆ
ರಾಜ್ಯ ಸರಕಾರದ ನಿರ್ದೇಶನದಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 9 ಮತ್ತು 10ನೇ ತರಗತಿಗಳು ಆರಂಭವಾಗಲಿದ್ದು, ಗರಿಷ್ಠ ಮಟ್ಟದ ಬಂದೋಬಸ್ತ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಫೆ. 14ರ ಬೆಳಗ್ಗೆ 6ರಿಂದ ಫೆ. 19ರ ಸಂಜೆ 6ರ ತನಕ ಎಲ್ಲ ಶಾಲೆ, ಕಾಲೇಜುಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಸಿಆರ್ಪಿಸಿ ಸೆ. 144ರ ಅನ್ವಯ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶವನ್ನು ಹೊರಡಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲೂ ಫೆ. 14ರಿಂದ 19ರ ವರೆಗೆ ಎಲ್ಲ ಪ್ರೌಢಶಾಲೆಗಳ 200 ಮೀ. ಸುತ್ತಮುತ್ತಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಮಾಹಿತಿ ನೀಡಿದ್ದಾರೆ.
'ಶಾಲೆಗಳು ಸೋಮವಾರ ಪುನಃ ಆರಂಭಗೊಳ್ಳಲಿದೆ. ಜಿಲ್ಲಾಧಿಕಾರಿಗಳು, ಡಿಡಿಪಿಐ ಹಾಗೂ ಶಾಲಾ ಆಡಳಿತ ಮಂಡಳಿಗಳು ಶಾಂತಿ ಸಭೆಯನ್ನು ನಡೆಸುವಂತೆ ಈಗಾಗಲೇ ಸೂಚಿಸಿದ್ದೇನೆ. ಶಾಲೆಗಳು ಆರಂಭವಾದ ನಂತರದ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕಾಲೇಜುಗಳನ್ನು ಆರಂಭಿಸಲಾಗುವುದು.'
– ಸಿ.ಎಂ ಬಸವರಾಜ ಬೊಮ್ಮಾಯಿ
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ