ಮೂಡುಬಿದಿರೆ: ವಿದ್ಯಾಭ್ಯಾಸದ ಸಮಯದಲ್ಲಿ ಪೂರ್ವತಯಾರಿ ಅಗತ್ಯ, ಪ್ರಾಮಾಣಿಕತೆಯಿಂದ ಶ್ರಮವಹಿಸಿದರೆ ಪ್ರತಿಫಲ ಪಡೆಯಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.
ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಸಿಬಿಎಸ್ಇ, ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯದಲ್ಲಿ ಉನ್ನತಿಯನ್ನು ಪಡೆಯಬೇಕು. ಭಾರತ ದೇಶದ ಯುವ ಸಂಪನ್ಮೂಲವನ್ನು ಇತರ ದೇಶಗಳಿಗೆ ಹೋಲಿಸಿದರೆ, ಭಾರತವು ಹೆಚ್ಚು ಯುವಶಕ್ತಿ ಹೊಂದಿರುವುದರಿಂದ ಅತ್ಯಂತ ಪ್ರಬಲವಾಗಿದೆ. ಆನ್ಲೈನ್ ಮೂಲಕ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕಿಂತ ತರಗತಿಯಲ್ಲಿ ಕುಳಿತು ಪಾಠ ಕೇಳುವುದರಿಂದ ಅನೇಕ ಪ್ರಯೋಜನವಿದೆ ಎಂದು ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಆಳ್ವಾಸ್ ಸೆಂಟ್ರಲ್ ಸ್ಕೂಲ್, ಕನ್ನಡ ಹಾಗೂ ಆಂಗ್ಲಮಾಧ್ಯಮ ಪ್ರೌಢ ಶಾಲೆಗಳ 526 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಬಳಿಕ ಔತಣಕೂಟವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಿಬಿಎಸ್ಇ ಶಾಲೆಯ ಮುಖ್ಯೋಪಾಧ್ಯಾಯ ಶಫಿಶೇಕ್, ಆಡಳಿತಾಧಿಕಾರಿ ಪ್ರೀತಮ್ ಕುಂದರ್ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯೆ ವಿಜಯ ಟಿ ಮೂರ್ತಿ ಸ್ವಾಗತಿಸಿದರು, ಆಂಗ್ಲ ಪ್ರೌಢಶಾಲೆಯ ಸಹಶಿಕ್ಷಕಿ ಐರಿನ್ ವಿಲ್ಮಾ ನಿರೂಪಿಸಿ, ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಬಿ. ವಂದಿಸಿದರು.