ಗುತ್ತಿಗೆದಾರನ ಆತ್ಮಹತ್ಯೆ ವಿಚಾರ, ಪೊಲೀಸರಿಂದ ಸ್ವತಂತ್ರ ತನಿಖೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Upayuktha
0

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಲ್ಲಾ ಕೋನಗಳಿಂದ ಪೊಲೀಸರು ಸ್ವತಂತ್ರ ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರಾಗಿರುವ ಸಂತೋಷ್ ಪಾಟೀಲ್ ಉಡುಪಿಯ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ಪ್ರಾಥಮಿಕ ಮಾಹಿತಿ ಬಂದಿದೆ. ಪೊಲೀಸ್ ತನಿಖೆಯ ಬಳಿಕ ಸಂಪೂರ್ಣ ವಿಚಾರ ರಾಜ್ಯದ ಜನತೆಗೆ ತಿಳಿಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.


ಕಾನೂನು ಸುವ್ಯವಸ್ಥೆಯ ಪಾಲನೆ ವಿಚಾರದಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಯಾವುದೇ ಗುಂಪು, ಸಂಘಟನೆಗಳು ಕಾನೂನು ಕೈಗೆತ್ತಿಕೊಂಡರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಹಿಜಾಬ್‌ ವಿವಾದದಿಂದ ಹುಟ್ಟಿಕೊಂಡ ಕ್ರಿಯೆ-ಪ್ರತಿಕ್ರಿಯೆಗಳನ್ನು ಸರಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಮಾಜದ್ರೋಹಿಗಳನ್ನು ಹತ್ತಿಕ್ಕಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಬೊಮ್ಮಾಯಿ ನುಡಿದರು.


ಯಾವುದೇ ಘಟನೆ ನಡೆದಾಗಲೂ ಅದರಿಂದ ರಾಜಕೀಯ ಲಾಭ ಪಡೆಯಲು ಹವಣಿಸುವುದು ಪ್ರತಿಪಕ್ಷಗಳ ಸಹಜ ನಡೆ. ಹಾಗಾಗಿ ಗುತ್ತಿಗೆದಾರನ ಆತ್ಮಹತ್ಯೆ ವಿಚಾರದಲ್ಲಿ ಪ್ರತಿಪಕ್ಷಗಳು ಮಾಡುವ ಆರೋಪಗಳು, ಹೋರಾಟಗಳ ಬಗ್ಗೆ ಹೆಚ್ಚಿನ ಮಹತ್ವವಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಂಡರು. ಆಗ ಅವರೇನಾದರೂ ರಾಜೀನಾಮೆ ನೀಡಿದ್ದರೇ? ಎಂದು ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದರು.

ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ, ಮುಂದಿನ ಚುನಾವಣೆಗೆ ಪಕ್ಷದ ಸಂಘಟನೆಗಾಗಿ ಹಲವು ಮಹತ್ವದ ಸಭೆಗಳನ್ನು ನಡೆಸಿದರು. ಸೋಮವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಅವರು, ಅಲ್ಲಿನ ವಿವಿಧ ಮುಖಂಡರು ಕಾರ್ಯಕರ್ತರು, ವಿವಿಧ ಸಮಿತಿಗಳ ಪ್ರಮುಖರ ಜತೆ ಸಮಾಲೋಚನೆ ನಡೆಸಿದರು.


ಇಂದು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಪ್ರಮುಖರ ಜತೆ ಸಮಾಲೋಚನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು.


ಕರಾವಳಿ ಜಿಲ್ಲೆಗಳು ಹಾಗೂ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಬಹಳಷ್ಟು ಸದೃಢವಾಗಿದ್ದು, ಮುಂದಿನ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಶಕ್ತಿಯೊಂದಿಗೆ ಮರಳಿ ಗೆದ್ದು ಬರಲಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top