'ಪುರುಷೋತ್ತಮ ಪೂಂಜ ಯಕ್ಷಗಾನದ ಸವ್ಯಸಾಚಿʼ

Upayuktha
0

ಮಂಗಳೂರು ವಿವಿಯಲ್ಲಿ ಪುರುಷೋತ್ತಮ ಪೂಂಜ ಸಂಸ್ಮರಣಾ ಕಾರ್ಯಕ್ರಮ, ಸಂಸ್ಮರಣಾ ಗ್ರಂಥ ಬಿಡುಗಡೆ


ಮಂಗಳೂರು: ಯಕ್ಷಗಾನ ಕಲಾವಿದರಿಗೆ ಕಷ್ಟವಿದ್ದರೂ ಕಲೆ, ಈಗಲೇ ಗಟ್ಟಿಯಾಗಿದೆ. ಏಕೆಂದರೆ ಇದೊಂದು ಆದಾಯ ಕಲೆಯಲ್ಲ, ಆರಾಧನಾ ಕಲೆ. ಯಕ್ಷಗಾನ ಇರುವವರೆಗೂ ಕನ್ನಡ ಭಾಷೆ, ಸಂಸ್ಕೃತಿಗೆ ಯಾವುದೇ ಅಪಾಯವಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿ ಅಧ್ಯಕ್ಷ ಡಾ. ಜಿಎಲ್‌ ಹೆಗಡೆ ಕುಮಟಾ ಅಭಿಪ್ರಾಯಪಟ್ಟರು. 


ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ಅಂಬುರುಹ ಯಕ್ಷ ಸದನ ಪ್ರತಿಷ್ಠಾನ ಬೊಟ್ಟಿಕೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ ದಯಾನಂದ ಪೈ ಮತ್ತು ಪಿ ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರಗಳ ಸಹಯೋಗದೊಂದಿಗೆ ಶನಿವಾರ ನಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾ ಕಾರ್ಯಕ್ರಮದಲ್ಲಿ ʼಯಕ್ಷ ಪುರುಷೋತ್ತಮʼ ಸಂಸ್ಮರಣಾ ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು, ಪೂಂಜರಿಗೆ ಭಾಗವತನಿಗೆ ಇರಬೇಕಾದ ಸಾಹಿತ್ಯ ಪರಿಜ್ಞಾನ ಮತ್ತು ಹಿಡಿತ ಅದ್ಭುತವಾಗಿತ್ತು. ಪೂಂಜರು ಶಿಷ್ಯರ ಮೂಲಕ ಯಕ್ಷ ಪರಂಪರೆಯನ್ನು ಮುಂದುವರಿಸಿದ್ದಾರೆ, ಎಂದರು.  


ಕಲಾವಿದ ವಿಶ್ವೇಶ್ವರ ಭಟ್‌ ಸುಣ್ಣಂಬಳ ಅವರು, ಪೂಂಜರು ಅಪಾರ ಜ್ಞಾನಿಯಾಗಿದ್ದರೂ ನೆನಪಾಗದ್ದನ್ನು ನಿಸ್ಸಂಕೋಚವಾಗಿ ಕೇಳುತ್ತಿದ್ದರು, ಚರ್ಚಿಸುತ್ತಿದ್ದರು. ಕಲಾವಿದನ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಅರ್ಥಗಾರಿಕೆ ಇರುತ್ತಿತ್ತು. ಹೊಸ ಪದ್ಯಗಳನ್ನು ಹೊಸೆದು ಹಾಡುತ್ತಿದ್ದರು. ಅವರ ಸಾಹಿತ್ಯಪೂರ್ಣ ಪ್ರಸಂಗಗಳು ಹಿರಿಯ ಭಾಗವತರ ಮೆಚ್ಚುಗೆ ಗಳಿಸಿಕೊಂಡಿವೆ, ಎಂದು ದಿವಂಗತರನ್ನು ನೆನಪಿಸಿಕೊಂಡರು.  

ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಶಿ ಮಾತನಾಡಿ, ಪುರುಷೋತ್ತಮ ಪೂಂಜರ  ಸರ್ವಾಂಗ ಪ್ರತಿಭೆಗೆ ಮಾರುಹೋದ ರಸಿಕ ನಾನು. ಅವರು ಯಕ್ಷಗಾನದ ದಶಾವತಾರಿ, ಶ್ರೇಷ್ಠ ಯಕ್ಷ ಕವಿಗಳಲ್ಲಿ ಒಬ್ಬರು, ಅಸಾಧಾರಣ ಕಲಾವಿದ ಮತ್ತು ಯಕ್ಷಗಾನ ಗುರು. ಯಕ್ಷಗಾನ ತುಳು ಪ್ರಸಂಗಗಳಲ್ಲೂ ಗಾಂಭೀರ್ಯತೆ ಉಳಿಸಿಕೊಂಡ ವಿರಳರಲ್ಲಿ ಒಬ್ಬರು, ಎಂದು ಶ್ಲಾಘಿಸಿದರು. 


ಸಂಸ್ಮರಣಾ ಗ್ರಂಥದ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳು ಮಾತನಾಡಿ, ಪುರುಷೋತ್ತಮ ಪೂಂಜಾರ ಸಂಸ್ಮರಣಾ ಗ್ರಂಥ ವ್ಯಕ್ತಿ ಪೂಜೆಯಲ್ಲ, ಕಲೆಯ ಬಗ್ಗೆ ಆಸಕ್ತರು ಓದಲು ಒಂದು ಆಕರ ಗ್ರಂಥ. ಇದರಲ್ಲಿ ಪೂಂಜ ಅವರೇ ಬರೆದ ಲೇಖನಗಳೂ ಸೇರಿವೆ. ಅಭಿನಂದನಾ ಗ್ರಂಥ ಸಂಸ್ಮರಣಾ ಗ್ರಂಥವಾಗಿರುವುದು ವಿಪರ್ಯಾಸ, ಎಂದರು. ಪ್ರಕಾಶಕ, ಅಜೆಕಾರು ಬಾಲಕೃಷ್ಣ ಶೆಟ್ಟಿ, ಗ್ರಂಥವನ್ನು ಸಿದ್ಧಪಡಿಸುವಲ್ಲಿ ಸಹಕರಿಸಿದ ಪೂಂಜರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರನ್ನು ನೆನೆದರು.


ಇದೇ ಸಂದರ್ಭದಲ್ಲಿ ಮಂಗಳೂರು ವಿವಿಯ ಪ್ರಸಾರಾಂಗ, ಕಲಾಗಂಗೋತ್ರಿ ಹಾಗೂ ಗೋಪಾಲಕೃಷ್ಣ ಯಕ್ಷಗಾನ ಸಂಘದ ಪ್ರತಿನಿಧಿಗಳನ್ನು, ʼಆಕೃತಿ ಪ್ರಕಾಶನʼದ ಕಲ್ಲೂರು ನಾಗೇಶ್‌ ಅವರನ್ನು ಸನ್ಮಾನಿಸಲಾಯಿತು. ಅಂಬುರುಹ ಯಕ್ಷ ಸದನ ಪ್ರತಿಷ್ಠಾನದ ಲೋಗೋ ಬಿಡುಗಡೆ ಮಾಡಲಾಯಿತು. 


ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಶ್ರೀಪತಿ ಕಲ್ಲೂರಾಯ, ಶ್ರೀ ವಿಷ್ಣುಮೂರ್ತಿ ಜನಾರ್ಧನ ದೇವಸ್ಥಾನದ  ಅರ್ಚಕ ಟಿ. ಸುಬ್ರಹ್ಮಣ್ಯ ಭಟ್, ಅಂಬುರುಹ ಯಕ್ಷ ಸದನ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಪುರುಷೋತ್ತಮ ಪೂಂಜ ಮೊದಲಾದವರು ಉಪಸ್ಥಿತರಿದ್ದರು. 


ಸುನಿಲ್ ಪಲ್ಲಮಜಲು ಹಾಗೂ ಸದಾಶಿವ ಆಳ್ವ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು. ದೀವಿತ್ ಕೊಟ್ಯಾನ್ ವಂದಿಸಿದರು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಯಕ್ಷಗಾನ ಪ್ರಸಂಗ ʼಮಾನಿಷಾದʼ ವನ್ನು ಕಲಾವಿದರು ಪ್ರದರ್ಶಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top