ಉಜಿರೆ: ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳವಾಗಿದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿ ದಾನದೊಂದಿಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾ ಸಬಲೀಕರಣದೊಂದಿಗೆ ಆರ್ಥಿಕ ಪ್ರಗತಿಗೆ ನೆರವು ಮತ್ತು ಮಾರ್ಗದರ್ಶನ ನೀಡಿರುವುದನ್ನು ಅವರು ಕೃತಜ್ಞತೆಯೊಂದಿಗೆ ಸ್ಮರಿಸಿದರು.
ಎರಡು ಭಕ್ತಿಗೀತೆಗಳನ್ನು ಅವರು ಸುಶ್ರಾವ್ಯವಾಗಿ ಹಾಡಿ ಶ್ರೋತೃಗಳಿಗೆ ಮುದ ನೀಡಿದರು.
ಡಾ. ಹೇಮಾವತಿ ವೀ.ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮ ಚಾರಿತ್ರ್ಯದೊಂದಿಗೆ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಬೇಕು ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಸಾಮಾಜಿಕ ಪರಿವರ್ತನೆಯಾಗಬೇಕು. ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಎಲ್ಲಾ ದೋಷಗಳನ್ನು ಹಾಗೂ ವ್ಯಸನಗಳನ್ನು ತ್ಯಜಿಸಿ ಆದರ್ಶ ನಾಯಕತ್ವದೊಂದಿಗೆ ಭಜನಾ ಮಂದಿರಗಳು ಉತ್ತಮ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಲಹೆ ನೀಡಿದ ಅವರು ಕಮ್ಮಟದಲ್ಲಿ ಆಸಕ್ತಿಯಿಂದ ಭಾಗವಹಿಸಿ ಎಲ್ಲರೂ ಭಜನಾಪಟುಗಳಾಗಬೇಕು ಎಂದು ಹೇಳಿದರು.
ವರದಿ ಸಾದರ ಪಡಿಸಿದ ಸುರೇಶ್ ಮೊಯಿಲಿ, 133 ಮಹಿಳೆಯರು ಮತ್ತು 183 ಪುರುಷರು ಸೇರಿದಂತೆ ಒಟ್ಟು 316 ಮಂದಿ ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತು ಅಮಿತ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಪುರುಷೋತ್ತಮ, ಪಿ.ಕೆ. ಧನ್ಯವಾದವಿತ್ತರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ