ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ವಿಶ್ರಾಂತ ಕುಲಪತಿಗಳು
ಮಂಗಳೂರು: ಅಧ್ಯಾಪಕನ ತಿಳುವಳಿಕೆ ನಿರಂತರವಾಗಿ ವಿಸ್ತರಿಸುತ್ತಿರಬೇಕು. ವಿಜ್ಞಾನ, ತಂತ್ರಜ್ಞಾನದ ಈ ಆಧುನಿಕ ಕಾಲಘಟ್ಟದಲ್ಲಿ ಶಿಕ್ಷಣ ವ್ಯವಸ್ಥೆ ಹಾಗೂ ಶಿಕ್ಷಕನ ಜವಾಬ್ಧಾರಿಯೂ ಹೆಚ್ಚಿದೆ. ಆತ ವಿಜ್ಞಾನವನ್ನೂ ಗೌರವಿಸುತ್ತಾ, ಪರಂಪರೆಯನ್ನು ಬಿಡದೆ ಮುಂದಿನ ಜನಾಂಗವನ್ನು ರೂಪಿಸಬೇಕು, ಎಂದು ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಬಿ.ಎ. ವಿವೇಕ್ ರೈ ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದ ಶಿಕ್ಷಣ, ಪರಂಪರೆ ಮತ್ತು ವೈಜ್ಞಾನಿಕ ಆವಿಷ್ಕಾರಗಳ ಸಮ್ಮಿಶ್ರಣವಾಗಿರಲಿದೆ. ಇ-ಬುಕ್, ಇ-ಜರ್ನಲ್ಸ್ ಗಳಂತಹ ಶಿಕ್ಷಣದ ಹೊಸ ತಂತ್ರಜ್ಞಾನದ ಅವಕಾಶಗಳನ್ನು ನಾವು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ, ಎಂದರು. ಈ ಸಂದರ್ಭದಲ್ಲಿ ಅವರು ತನ್ನಲ್ಲಿರುವ ಸುಮಾರು 2500 ಪುಸ್ತಕಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯಲಕ್ಕೆ ನೀಡುತ್ತೇನೆ, ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ನಾವು ವಿದ್ಯಾವಂತರಾದರೆ ಸಾಲದು, ವಿವೇಕವಂತರಾಗಬೇಕು. ಅತ್ಯುತ್ತಮ ಶಿಕ್ಷಕ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ಬದುಕುತ್ತಾನೆ. ಅವರಿಗೆ ಸ್ಪೂರ್ತಿಯ ಸೆಲೆಯಾಗುತ್ತಾನೆ, ಎಂದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ 'ಅತ್ಯುತ್ತಮ ಕುಲಪತಿʼ ಗೌರವಕ್ಕೆ ಪಾತ್ರರಾದ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಣಕಾಸು ಅಧಿಕಾರಿ ಪ್ರೊ.ಜಯಪ್ಪ ಉಪಸ್ಥಿತರಿದ್ದರು. ಮಂಗಳೂರು ವಿವಿ ಕುಲಸಚಿವ ಡಾ.ಕಿಶೋರ್ ಕುಮಾರ್ ಸಿ.ಕೆ.ಅವರು ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಪ್ರೊ.ಮಂಜುನಾಥ ಪಟ್ಟಾಬಿ ಅವರು ವಂದಿಸಿದರು. ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಹಾಗೂ ಡಾ.ಪ್ರೀತಿ ಕೀರ್ತಿ ಡಿʼಸೋಜ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ