ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಾಪುರ ಕನ್ನಡದ ಬಗ್ಗೆ ಹೆಚ್ಚಿನ ಸಂಶೋಧನೆ ಮತ್ತು ಅಧ್ಯಯನಕ್ಕಾಗಿ ಒಂದು ಪ್ರತ್ಯೇಕ ಪೀಠ ಸ್ಥಾಪನೆ ಮಾಡುವ ಕುರಿತು ಚರ್ಚಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ವಿಶ್ವವಿದ್ಯಾನಿಲಯ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಕರ್ನಾಟಕ ಸರ್ಕಾರದ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರು, ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರ ಗೌರವ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ. ಕೆ., ಹಣಕಾಸು ಅಧಿಕಾರಿ ಪ್ರೊ. ಕೆ. ಎಸ್. ಜಯಪ್ಪ, ವಿಶೇಷಾಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿರಿದ್ದರು.
ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬೈಂದೂರು ಇಲ್ಲಿಯ ವಿಭಿನ್ನವಾದ ಕನ್ನಡ ಆಡುಭಾಷೆ, ಕಲೆ, ಸಾಹಿತ್ಯ ಸಂಸ್ಕೃತಿ, ಇತಿಹಾಸ, ಪರಂಪರೆ, ಆಚರಣೆ, ವೈವಿಧ್ಯತೆಗಳನ್ನು ದಾಖಲಿಸಲು ಮತ್ತು ಇನ್ನೂ ಹೆಚ್ಚಿನ ಸಂಶೋಧನಾತ್ಮಕ ಅಧ್ಯಯನ ನಡೆಸುವ ಉದ್ದೇಶದೊಂದಿಗೆ, ಪ್ರತ್ಯೇಕ ಪೀಠ ಸ್ಥಾಪನೆಯ ಬಗ್ಗೆ ಒಲವು ವ್ಯಕ್ತವಾಯಿತು.