ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ಮಂಗಳೂರು ತಾಲೂಕು 22ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಗರದ ಶಾರದಾ ವಿದ್ಯಾಲಯದಲ್ಲಿ ಗುರುವಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷ ಎಂ.ಪಿ ಶ್ರೀನಾಥ್ ಅವರ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿಣಿ ಸಭೆ ನಿರ್ಣಯದಂತೆ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್ 30 ರಂದು ಭಾನುವಾರ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣದ ಬಳಿಕ ಸಮ್ಮೇಳನ ಉದ್ಘಾಟನಾ ಸಮಾರಂಭ, ವಿಚಾರ ಗೋಷ್ಠಿ, ಕವಿ ಗೋಷ್ಠಿ ಹಾಗೂ ಸಾಹಿತ್ಯ ಗೋಷ್ಠಿ ನಡೆಯಲಿದ್ದು, ದಿನ ವಿಡೀ ನಡೆಯುವ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಅನೇಕ ಗಣ್ಯರು ಭಾಗವಹಿಸಲಿರುವರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮತ್ತು ರಂಗಕರ್ಮಿ ಡಾ. ನಾ ದಾಮೋದರ ಶೆಟ್ಟಿ ಆಯ್ಕೆಯಾಗಿರುವುದಾಗಿ ಡಾ. ಎಂ.ಪಿ ಶ್ರೀನಾಥ್ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಅಧ್ಯಕ್ಷ ಡಾ. ಮಂಜುನಾಥ್ ರೇವಣ್ಕರ್ , ಎಲ್ಲರ ಸಹಕಾರದಿಂದ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆಯಿತ್ತರು. ಕಾರ್ಯ ಕಾರಣಿ ಸಮಿತಿ ಸದಸ್ಯರು ಸಮ್ಮೇಳನದ ಬಗ್ಗೆ ಅನೇಕ ಸಲಹೆ ಸೂಚನೆಗಳನ್ನು ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಸಮಿತಿ ಸದಸ್ಯರನೇಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಗಣೇಶ್ ಪ್ರಸಾದ್ ಪ್ರಸ್ತಾವಿಸಿದರು. ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಸ್ವಾಗತಿಸಿ, ಖಜಾಂಚಿ ಎನ್.ಸುಬ್ರಾಯ ಭಟ್ ವಂದಿಸಿದರು.