ಪರಿಸರ ಅರಿತು ಸ್ಪಂದಿಸುವ ವಿದ್ಯಾರ್ಥಿಗಳೇ ರೆಡ್ ಕ್ರಾಸ್ ಜೀವಾಳ: ಡಾ. ಅನಸೂಯ ರೈ
ಮಂಗಳೂರು: ಪರಿಸರವನ್ನು ಅರಿತುಕೊಂಡು ಸ್ಪಂದಿಸುವ ವಿದ್ಯಾರ್ಥಿಗಳಿಂದಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಕೊವಿಡ್ ನಂತಹ ಸವಾಲಿನ ಸಂದರ್ಭಗಳಲ್ಲಿಯೂ ವಿಶೇಷ ಸಾಧನೆ ಮಾಡಿದೆ, ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮಂಗಳವಾರ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ, ಐಆರ್ಸಿ ಸಂಸ್ಥಾಪನಾ ದಿನ ಹಾಗೂ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೆಡ್ ಕ್ರಾಸ್ ವತಿಯಿಂದ ನಿರಂತರ ಚಟುಚಟಿಕೆಗಳನ್ನು ಹಮ್ಮಿಕೊಂಡ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಬೆಂಬಲಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದ ಸಲ್ಲಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ, ರೆಡ್ ಕ್ರಾಸ್ ನ ಹುಟ್ಟು, ಸ್ವರೂಪ ಮತ್ತು ಧ್ಯೇಯೋದ್ದೇಶಗಳನ್ನು ವಿವರಿಸಿದರು. “ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಅಪಾರ ಅವಕಾಶಗಳನ್ನು ಒದಗಿಸುತ್ತದೆ. ಮಂಗಳೂರು ವಿವಿಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಸಂಸ್ಥೆಗೆ ರಾಜ್ಯಮಟ್ಟದಲ್ಲಿ ಕೀರ್ತಿ ತಂದಿದ್ದಾರೆ,” ಎಂದರು.
ದೇರಳಕಟ್ಟೆಯ ಯೆನಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ನಿತ್ಯಶ್ರೀ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರಸ್ವಾಮಿ ಎಂ ಅತಿಥಿಗಳನ್ನು ಸ್ವಾಗತಿಸಿ, ಮಹತ್ವಾಕಾಂಕ್ಷೆಯ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿ ಕ್ಷಮ್ಯ ಅಮೀನ್ ಕಾರ್ಯಕ್ರಮ ನಿರೂಪಿಸಿದರೆ, ಭೂಮಿಕ ಧನ್ಯವಾದ ಸಮರ್ಪಿಸಿದರು.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳ “ಹಚ್ಚೇವು ಕನ್ನಡದ ದೀಪ…” ಹಾಡಿನ ಸುಮಧುರ ಗಾಯನ ಗಮನ ಸೆಳೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ