ರಾಜ್ಯದ ಹಲವೆಡೆ ಬಿರುಸಿನ ಮಳೆ: ಫೆ.2ರವರೆಗೂ ಮಳೆ ಸಾಧ್ಯತೆ

Upayuktha
0

ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ದ.ಕ ಜಿಲ್ಲೆಯ ವಿವಿಧೆಡೆ ಮಂಗಳವಾರ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ.


ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಭಾಗಮಂಡಲದ ಕೆಲವೆಡೆ ಇನ್ನೂ ಭತ್ತದ ಕೊಯ್ಲು ಆಗಿಲ್ಲ. ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಚದುರಿದಂತೆ ಮಳೆಯಾಗಿದ್ದು, ಒಣ ಹಾಕಿದ ಅಡಿಕೆ ಒದ್ದೆಯಾಗಿ ಬೆಳೆಗಾರರು ಕಂಗಾಲಾಗಿದ್ದಾರೆ.


ಜ.27ರಿಂದ ಫೆ.2ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಪ್ರಕಟಣೆ ತಿಳಿಸಿದೆ. ಚಾಮರಾಜನಗರ ಮತ್ತು ಯಳಂದೂರು ತಾಲ್ಲೂಕಿನ ಕೆಲವೆಡೆ, ಮೈಸೂರು ನಗರದಲ್ಲಿ ಹಾಗೂ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ.


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್‌.ಆರ್.ಪುರ, ಶೃಂಗೇರಿ ತಾಲ್ಲೂಕಿನಲ್ಲೂ ಮಳೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ಫಲ್ಗುಣಿ, ಭಾರತೀಬೈಲ್, ಹುಲ್ಲೇಮನೆ ಸುತ್ತಲಿನ ಪ್ರದೇಶದಲ್ಲಿ ಬಿರುಸಾಗಿ ಸುರಿದಿದೆ. ಇಲ್ಲೂ ಕೂಡ ಕಾಫಿ ಮತ್ತು ಭತ್ತಕ್ಕೆ ಹಾನಿಯಾಗಿದೆ. ಕೊಪ್ಪ ತಾಲ್ಲೂಕಿನಲ್ಲೂ ರಭಸವಾಗಿ ಸುರಿದಿದೆ. ಎನ್‌.ಆರ್‌.ಪುರ, ಶೃಂಗೇರಿ ಭಾಗದಲ್ಲಿ ತುಂತುರು ಮಳೆಯಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top