ವೆನ್‌ಲಾಕ್ ಆಸ್ಪತ್ರೆಯಲ್ಲಿ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭ, ಶ್ಲಾಘನೀಯ: ರವಿಕುಮಾರ್ ಎಂ.ಆರ್

Upayuktha
0

ಮಂಗಳೂರು: ನಗರದ ವೆನ್ ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಅತ್ಯಂತ ಶ್ಲಾಘನೀಯ, ಇದು ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಆಸ್ಪತ್ರೆಗಳಲ್ಲೂ ಪ್ರಕೃತಿ ಚಿಕಿತ್ಸೆ ಆರಂಭಿಸಲು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಹಾಗೂ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದರು.


ಅವರು ಮಾ.25ರ ಶನಿವಾರ ನಗರದ ವೆನ್ ಲಾಕ್ ಆಯುಷ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಮಾತನಾಡಿದರು.


ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈ ರೀತಿಯ ಪ್ರಕೃತಿ ಚಿಕಿತ್ಸೆಗೆ ಅನುಕೂಲವಾಗಬೇಕಾದ ಭೂಮಿ ಮತ್ತು ಮೂಲಸೌಲಭ್ಯಕ್ಕೆ ಜಿಲ್ಲಾಡಳಿತ ಸಹಕಾರ ನೀಡಲಿದೆ ಎಂದ ಅವರು, ಇತ್ರೀಚೆಗೆ ಆಯುರ್ವೇದ, ನ್ಯಾಚುರೋಪತಿ, ಯುನಾನಿ ಚಿಕಿತ್ಸೆಗೆ ಹೆಚ್ಚಿನ ಬೇಡಿಕೆ ಇದೆ. ಸರ್ಕಾರಿ ಆಯುಷ್ ಆಸ್ಪತ್ರೆಯೊಂದರಲ್ಲಿ ಸುಸಜ್ಜಿತವಾದ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ನಗರದ ಬಡ ರೋಗಿಗಳಿಗೆ ವರವಾಗಿದೆ, ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೂ ಈ ಸೌಲಭ್ಯ ದೊರೆಯಬೇಕು. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ಕಟ್ಟಡ, ಮೂಲಸೌಲಭ್ಯ ಒದಗಿಸಲಾಗುವುದು ಎಂದರು.


ಆಯುಷ್ ಆಸ್ಪತ್ರೆಗೆ  ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಎಂಸಿಎಫ್) ಸುಮಾರು 20 ಲಕ್ಷ ರೂ.ಮೌಲ್ಯದ ಅತ್ಯಾಧುನಿಕ ಪ್ರಕೃತಿ ಚಿಕಿತ್ಸೆ ಸಂಬಂಧಿತ ಉಪಕರಣಗಳನ್ನು ಒದಗಿಸಿದೆ. ಈ ಮೂಲಕ ಎಂಸಿಎಫ್ ಸಿಎಸ್‌ಆರ್ ನಿಧಿ ಉತ್ತಮ ಕಾರ್ಯಕ್ಕೆ ವಿನಿಯೋಗವಾಗಿದೆ ಎಂದರು.


ಎಂಸಿಎಫ್ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್‌ಕುಮಾರ್, ವೆನ್ಲಾಕ್ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ. ಸದಾಶಿವ ಶ್ಯಾನುಭೋಗ್ ವೇದಿಕೆಯಲ್ಲಿದ್ದರು.


ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಮಟ್ಟದಲ್ಲಿ ಪ್ರಥಮ ಬಾರಿಗೆ ಅತ್ಯಾಧುನಿಕ ಉಪಕರಣಗಳನ್ನೊಳಗೊಂಡ ಸುಸಜ್ಜಿತ ಪ್ರಕೃತಿ ಚಿಕಿತ್ಸಾ ವಿಭಾಗವೊಂದು ಸಾರ್ವಜನಿಕತ ಸೇವೆಗೆ ತೆರದುಕೊಂಡಿದೆ. ಈ ಕೇಂದ್ರದಲ್ಲಿ ಎಲ್ಲ ವಿಧದ ಜಲಚಿಕಿತ್ಸೆ, ಸೋನಾಬಾತ್, ಅಕ್ಯುಪಂಕ್ಚರ್, ಅಕ್ಯುಪ್ರೆಶರ್, ಅಯಾನ್ ಡೆಟಾಕ್ಸ್ ಥೆರಪಿ, ಮ್ಯಾಗ್ನೆಟಿಕ್ ಥೆರಪಿ, ಮ್ಯೂಸಿಕ್ ಥೆರಪಿ, ಮಡ್‌ಬಾತ್ ಸಹಿತ ಎಲ್ಲ ಪ್ರಮುಖ ಹಾಗೂ ಅಪರೂಪದ ಚಿಕಿತ್ಸೆಗಳು ಲಭ್ಯ. ಬಿಪಿಎಲ್ ಕಾರ್ಡ್‌ದಾರರಿಗೆ ಸದ್ಯ ಉಚಿತವಾಗಿ ಚಿಕಿತ್ಸೆ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಸರಕಾರಿ ಮಾರ್ಗಸೂಚಿಯಂತೆ ಎಪಿಎಲ್ ಕಾರ್ಡ್‌ದಾರರಿಗೂ ಕನಿಷ್ಠ ದರದಲ್ಲಿ ಚಿಕಿತ್ಸೆ ದೊರೆಯಲಿದೆ ಎಂದರು.

ಟ್ರೈನಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

(ಕರ್ನಾಟಕ ವಾರ್ತೆ)

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
To Top