ಉಡುಪಿ : ಸಾರ್ವಜನಿಕರಿಗೆ, ಬಡವರಿಗೆ, ರೈತಾಪಿವರ್ಗದವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನಿರಂತರವಾಗಿಕಡಿಮೆ ಬೆಲೆಯಲ್ಲಿಔಷಧಿಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಜನೌಷಧಿಯು ಭಾರತ ದೇಶದಲ್ಲಿ ಔಷಧ ಉತ್ಪಾದನೆ ಹಾಗೂ ವಿತರಣೆಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.
ಅವರು ಇಂದು ನಗರದ ಅಜ್ಜರ ಕಾಡು ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಕಚೇರಿಯಶ್ರೀ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಔಷಧ ನಿಯಂತ್ರಣ ಇಲಾಖೆ ಉಡುಪಿ, ಜಿಲ್ಲಾಆಸ್ಪತ್ರೆ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಅಜ್ಜರ ಕಾಡು ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ನಡೆದ ಜನ ಔಷಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನೌಷಧ ಕೇಂದ್ರಗಳಲ್ಲಿ ಶೇ. 50-60 ರಷ್ಟುಕಡಿಮೆ ಬೆಲೆಯಲ್ಲಿ ಔಷಧಿಗಳು ಲಭ್ಯವಿದ್ದು, ಇದರಿಂದ ಜನಸಾಮಾನ್ಯರಿಗೆ ವೆಚ್ಚದ ಉಳಿತಾಯವಾಗಲಿದೆ. ಜಿಲ್ಲೆಯಲ್ಲಿ 49 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇದರ ಪ್ರಯೋಜನವನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ.ಗಾಮೀಣ ಪ್ರದೇಶದಲ್ಲಿಯೂ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಇದು ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಿದ ಮೈಲಿಗಲ್ಲು ಎಂದರು.
ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ ಎಂಬ ಧ್ಯೇಯ ವಾಕ್ಯದೊಂದಿಗೆ, ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ಹಾಗೂ ಉಚಿತ ಔಷಧ ನೀಡುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಕಾಯಿಲೆಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಕೂಡಾ ಉಚಿತ ಚಿಕಿತ್ಸೆ ಲಭ್ಯವಿದೆ ಎಂದರು.
ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಶಂಕರ್ ನಾಯಕ್ ಮಾತನಾಡಿ, ಜನೌಷಧಿ ಯೋಜನೆಯ ಕುರಿತು ಜನರಿಗೆ ಅರಿವು ಮೂಡಿಸಿ, ಅದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಔಷಧಗಳ ಬೆಲೆ ಕಡಿಮೆ ಇರುವ ಕಾರಣ ಜನರಿಗೆ ಔಷಧಿಯ ಗುಣಮಟ್ಟದ ಬಗ್ಗೆ ಗೊಂದಲವಿದ್ದು, ಈ ಬಗ್ಗೆ ಇಲಾಖೆ ವತಿಯಿಂದ ಔಷಧಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷಿಸಲಾಗುತ್ತಿದೆ. ಕ್ಯಾನ್ಸರ್ ರೋಗಕ್ಕೆ ಉಪಯೋಗಿಸುವ ದುಬಾರಿಯಾದ ಔಷಧಗಳು ಕಡಿಮೆ ದರದಲ್ಲಿ ಜನೌಷಧಿ ಕೇಂದ್ರಗಳಲ್ಲಿ ಲಭ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಬಾಳಿಗ ಆಸ್ಪತ್ರೆಯ ಡಾ.ಪಿ.ವಿ ಭಂಡಾರಿ, ಡಾ.ವೀಣಾ, ವಿವೇಕ್ ಕಾಮತ್, ಪ್ರೊ.ಶಶಿರೇಖಾ, ವಿವಿಧ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಜನೌಷಧಿ ಕೇಂದ್ರದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಅಧ್ಯಕ್ಷ ಸುಂದರ್ ಪೂಜಾರಿ ಮೂಡುಕುಕ್ಕುಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಆನಂದ್ಜತ್ತನ್ ನಿರೂಪಿಸಿ, ಮಧುಸೂದನ ಹೇರೂರು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ


