ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

Upayuktha
0

 ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ನಿವೃತ್ತಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.


ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್ (rank) ನೊಂದಿಗೆ ಎಂ.ಎಸ್ಸಿ. ಪದವಿ ಪಡೆದಿದ್ದು, ಕಳೆದ 35 ವರ್ಷಗಳಿಂದ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


ಈ ಹಿಂದೆ ಅವರು ಕಾಲೇಜಿನ ಎನ್ಎಸ್ಎಸ್ ಅಧಿಕಾರಿಯಾಗಿ ಶ್ರೇಷ್ಠ ಯೋಜನಾಧಿಕಾರಿ ‘ರಾಜ್ಯ ಪ್ರಶಸ್ತಿ’ ಹಾಗೂ ‘ಇಂದಿರಾಗಾಂಧಿ ಎನ್ಎಸ್ಎಸ್ ರಾಷ್ಟ್ರಪ್ರಶಸ್ತಿ’ ಪಡೆದಿದ್ದಾರೆ. ಕಾಲೇಜಿನ ವಾರ್ಷಿಕ ಸಂಚಿಕೆ ‘ಮನೀಷಾ’ದ ಕಾರ್ಯನಿರ್ವಾಹಕ ಸಂಪಾದಕರಾಗಿ ಐದು ವರ್ಷಗಳ ಕಾಲ ಜವಾಬ್ದಾರಿ ನಿರ್ವಹಿಸಿ ವಿಶ್ವವಿದ್ಯಾನಿಲಯ ಮಟ್ಟದ ಶ್ರೇಷ್ಠ ವಾರ್ಷಿಕ ಸಂಚಿಕೆ ಪ್ರಶಸ್ತಿಯನ್ನು ಪಡೆಯುವಲ್ಲಿ ಪಾತ್ರ ವಹಿಸಿದ್ದರು. 


ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ನಿಯತಕಾಲಿಕೆಗಳಲ್ಲಿ ಲೇಖನಗಳನ್ನು ಪ್ರಕಟಪಡಿಸಿದ್ದಾರೆ. ವ್ಯಕ್ತಿತ್ವ ವಿಕಸನ ಸಂಘಟನೆ ಜೆಸಿ ಸಂಸ್ಥೆಯ ಪದಾಧಿಕಾರಿಯಾಗಿ, ತರಬೇತುದಾರರಾಗಿ ನೂರಾರು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಕಾರ್ಯಕ್ರಮ ನಿರೂಪಕರಾಗಿ ಅನೇಕ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳ ನಿರೂಪಣೆ ಮಾಡಿದ್ದಾರೆ.


ಅಷ್ಟೇ ಅಲ್ಲದೆ, ಬೆಳ್ತಂಗಡಿ ತಾಲೂಕಿನ ಸಾಂಸ್ಕೃತಿಕ ಸಂಘಟನೆ ‘ಸಮೂಹ’ ಇದರ ಅಧ್ಯಕ್ಷರಾಗಿರುವ ಇವರು, ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಕೃತಿ, ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಪರಿಸರ- ಈ ವಿಷಯಗಳಿಗೆ ಸಂಬಂಧಪಟ್ಟಂತೆ ಅನೇಕ ತಜ್ಞ ಉಪನ್ಯಾಸಗಳನ್ನು ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘ ‘ಅಮುಕ್ತ್’ ಇದರ ಉಪಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top