ಮಿಜಾರು (ಮೂಡುಬಿದಿರೆ): ‘ಮಕ್ಕಳ ವ್ಯಕ್ತಿತ್ವ ವಿಕಸನದ ಜೊತೆ ಮನೋವಿಕಸನ ಅವಶ್ಯವಾಗಿದೆ. ಇದರಿಂದ ಪರಿಪೂರ್ಣ ವ್ಯಕ್ತಿತ್ವ ರೂಪಿಸಲು ಸಾಧ್ಯ’ ಎಂದು ಆಳ್ವಾಸ್ ಆರೋಗ್ಯ ಕೇಂದ್ರದ ಶಿಶುತಜ್ಞ ಡಾ. ವಸಂತ್ ಟಿ. ಹೇಳಿದರು.
ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜು ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ಹಮ್ಮಿಕೊಂಡ ‘ಚಿಣ್ಣರ ಆರೋಗ್ಯ' ಬೇಸಿಗೆ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರವು ಮಕ್ಕಳ ಮನಸ್ಸಿನ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಪರಿಸರ ಕಲ್ಪಿಸಬೇಕು. ಮಕ್ಕಳು ಒಳ್ಳೆಯ ಅಭ್ಯಾಸ ರೂಢಿಸಿಕೊಳ್ಳುವಂತೆ ಮಾಡಬೇಕು. ಇದು ಭವಿಷ್ಯದಲ್ಲಿ ಅವರು ಉತ್ತಮ ಆಯ್ಕೆ ಹಾಗೂ ಸರಿಯಾದ ಹಾದಿಯಲ್ಲಿ ನಡೆಯಲು ಸಹಕಾರಿ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಮಗುವಿನ ಸಮಗ್ರ ಬೆಳವಣಿಗೆಗೆ ಪ್ರತಿ ಮಗುವೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯ. ಉತ್ಸಾಹಭರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಏಕಾಗ್ರತೆ ಹೆಚ್ಚುತ್ತದೆ. ಪೋಷಕರು, ಶಿಕ್ಷಕರು ಉತ್ತಮ ಹವ್ಯಾಸ, ಆಸಕ್ತಿ ಬೆಳೆಸಲು ಅನುವು ಮಾಡಿಕೊಡಬೇಕು ಎಂದರು.
ಒಂದು ವಾರದ ಶಿಬಿರದಲ್ಲಿ ವಿವಿಧ ಮಾದರಿಯ ಆಟ, ಪಠ್ಯೇತರ ಚಟುವಟಿಕೆಗಳು, ಪೌಷ್ಟಿಕ ಆಹಾರ, ಯೋಗ, ಪ್ರಾಣಾಯಾಮ ಇತ್ಯಾದಿ ಮೂಲಕ ಮಗುವನ್ನು ಬೌದ್ಧಿಕ ಹಾಗೂ ಮಾನಸಿಕವಾಗಿ ಸದೃಢಗೊಳಿಸುವುದು ಪ್ರಮುಖ ಉದ್ದೇಶ ಎಂದು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವನಿತಾ ಶೆಟ್ಟಿ ಹೇಳಿದರು.
ಆಳ್ವಾಸ್ ಫಾರ್ಮಸಿ(ಔಷಧಾಲಯ) ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಇದ್ದರು. ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವನಿತಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಅನಂತ ಕೃಷ್ಣ ಸಿ.ವಿ ನಿರೂಪಿಸಿ, ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ