201 ಜೋಡಿ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಮದುವೆ ಮನೆಯ ಸಂಭ್ರಮ, ಸಡಗರ. ಬುಧವಾರ ಸಂಜೆ ಗಂಟೆ 6:40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 201 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.
ಇಂದು ಮಂಗಳವಾರ ಅವರ ದಾಖಲೆಗಳನ್ನೆಲ್ಲಾ ಪರಿಶೀಲಿಸಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುವುದು.
ಬುಧವಾರ ಸಂಜೆ 5 ಗಂಟೆಯಿಂದ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗುವರು.
ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಚಲನಚಿತ್ರ ನಟ ತೂಗುದೀಪ ದರ್ಶನ್ ಮೊದಲಾದ ಗಣ್ಯರು ಮಂಗಲಸೂತ್ರ ವಿತರಿಸುವರು. ವೇದ-ಮಂತ್ರ ಘೋಷ ಪಠಣದೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ನಡೆಯುತ್ತದೆ. ಬಳಿಕ ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ನೂತನ ದಂಪತಿಗಳು ಅವರ ಊರಿಗೆ ತೆರಳುವರು.
ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದು ವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದ್ದು ಪ್ರತಿವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ 12,576 ಜೊತೆ ಧರ್ಮಸ್ಥಳದಲ್ಲಿ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ