ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ತುಕಾರಾಂ ಹರಿಬಾವು ಮುಂಡೆ

Upayuktha
0

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 13 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ  ಕ್ಷೇತ್ರದ ಸಾಮಾನ್ಯ ವೀಕ್ಷಕ ತುಕಾರಾಂ ಹರಿಬಾವು ಮುಂಡೆ ಹೇಳಿದರು.


ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮತೆಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ಚುನಾವಣೆಯ ಅತ್ಯಂತ ಪ್ರಮುಖ ಮತ್ತು ಅಂತಿಮ ಹಂತವಾದ ಮತ ಎಣಿಕೆ ಕಾರ್ಯವು ಇಡೀ ಚುನಾವಣೆ ಪ್ರಕ್ರಿಯೆಯ ಮಹತ್ವದ ಘಟ್ಟವಾಗಿದ್ದು, ಜನಪ್ರತಿನಿಧಿಯೊಬ್ಬರನ್ನು ಆಯ್ಕೆ ಮಾಡುವ ಈ ಪ್ರಕ್ರಿಯೆಯಲ್ಲಿ ಸಿಬ್ಬಂದಿಗಳು ಯಾವುದೇ ಗೊಂದಲ, ಆತುರ, ಒತ್ತಡಗಳಿಗೆ ಒಳಗಾಗದೇ ನಿಖರವಾದ ಫಲಿತಾಂಶವನ್ನು ನೀಡಲು ಅನುಕೂಲವಾಗುವಂತೆ ಅತ್ಯಂತ ಜವಾಬ್ದಾರಿಯುತವಾಗಿ ಮತ ಎಣಿಕೆ ಕಾರ್ಯವನ್ನು ನಿರ್ವಹಿಸುವಂತೆ ತಿಳಿಸಿದರು.


ಪ್ರತಿಯೊಂದು  ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ವಿಭಿನ್ನವಾಗಿದ್ದು, ಮತ ಎಣಿಕೆಯು ಯಾವುದೇ ಗೊಂದಲಗಳಿಂದ  ಕೂಡಿರದಂತೆ ಸ್ಪಷ್ಟವಾಗಿ ಕ್ರೋಢೀಕರಿಸಿ ಅಭ್ಯಥಿಗಳು ಮತ್ತು ಅವರ ಏಜೆಂಟರುಗಳಿಂದ ಯಾವುದೇ ಆಕ್ಷೇಪಣೆಗಳು ಬಾರದಂತೆ ಎಚ್ಚರವಹಿಸುವಂತೆ ತಿಳಿಸಿದರು. ಮತ ಎಣಿಕೆ ಕಾರ್ಯದ ಕುರಿತಂತೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳ್ನು ತಪ್ಪದೇ ಪಾಲಿಸುವಂತೆ ತಿಳಿಸಿದ ಅವರು ಇ.ವಿ.ಎಂ ಗಳಲ್ಲಿನ ಮತ ಎಣಿಕೆ ಮತ್ತು ಪೋಸ್ಟಲ್ ಬ್ಯಾಲೆಟ್ ಗಳ ಎಣಿಕೆಯ ಕುರಿತಂತೆ ಯಾವುದೇ ಗೊಂದಲಗಳಿದ್ದಲ್ಲಿ ತರಬೇತಿ ಸಮಯದಲ್ಲಿ ಬಗೆಹರಿಸಿಕೊಳ್ಳುವಂತೆ ತಿಳಿಸಿದರು. 


ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮಗೆ ನಿಗದಿಪಡಿಸಿದ ಅವಧಿಗೆ ಸರಿಯಾಗಿ ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಿ, ತಮ್ಮ ಟೇಬಲ್ ಬಳಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಪ್ರತೀ ಹಂತದ ಮತ ಎಣಿಕೆಯ ವಿವರಗಳನ್ನು ಕೇಂದ್ರದಲ್ಲಿ ಹಾಜರಿರುವ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್ ಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದಂತೆ ತಿಳಿಸುವುದರ ಮೂಲಕ ಸಕಾಲದಲ್ಲಿ ನಿಖರ ಫಲಿತಾಂಶ ನೀಡಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು. ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಅಣ್ಣಾವಿ ದಿನೇಶ್ ಕುಮಾರ್, ಕಾರ್ಕಳ ವಿಧಾನಸಭಾ  ಕ್ಷೇತ್ರದ ಸಾಮಾನ್ಯ ವೀಕ್ಷಕ ಆಂಧ್ರ ವಂಶಿ, ಅಪರ ಜಿಲ್ಲಾಧಿಕಾರಿ ವೀಣಾ, ತರಬೇತಿ ನಿರತ ಐ.ಎ.ಎಸ್ ಆಧಿಕಾರಿ ಯತೀಶ್ ಉಪಸ್ಥಿತರಿದ್ದರು.  


ಮಾಸ್ಟರ್ ಟ್ರೈನರ್ ಡಾ.ಅಶೋಕ್ ಕಾಮತ್ ಮತ ಎಣಿಕೆ ಪ್ರಕ್ರಿಯೆಗಳ ಬಗ್ಗೆ ತರಬೇತಿ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top