ಕನ್ನಡದ ಕಟ್ಟಾಳು, ಕಾಸರಗೋಡಿನ ಅಸ್ಮಿತೆಯಾಗಿ ಶತಮಾನಪೂರ್ಣ ಸಾರ್ಥಕ ಬಾಳನ್ನು ಬಾಳಿದ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ಜನ್ಮದಿನ ಇಂದು ಜೂನ್ 8ರಂದು. ಇಂದು ಅವರು ಬದುಕಿದ್ದಿದ್ದರೆ ಅವರಿಗೆ 108 ವರ್ಷ ಭರ್ತಿಯಾಗುತ್ತಿತ್ತು. ಕರ್ನಾಟಕದ ಜತೆ ಕಾಸರಗೋಡಿನ ವಿಲೀನೀಕರಣದ ಮಹಾ ಕನಸನ್ನು ಕಾಣುತ್ತಲೇ ಇಹಲೋಕ ತ್ಯಜಿಸಿದ ಅವರ ದಿವ್ಯ ಚೇತನಕ್ಕೆ ಗೌರವ ಸಲ್ಲುವಂತಾಗಲು ಅವರು ಹಾಕಿಕೊಟ್ಟ ವಿಲೀನೀಕರಣದ ಹೋರಾಟದ ಹಾದಿಯಲ್ಲಿ ಮುನ್ನಡೆದು ಯಶಸ್ಸು ಸಾಧಿಸುವುದೇ ಕಾಸರಗೋಡಿನ ಕನ್ನಡಿಗರ ಗುರಿಯಾಗಬೇಕು. ಅದಕ್ಕೆ ಕನ್ನಡ ನಾಡಿನ ಆರೂವರೆ ಕೋಟಿ ಕನ್ನಡಿಗರ ಮತ್ತು ಕರ್ನಾಟಕ ಸರಕಾರದ ಒತ್ತಾಸೆ, ಬೆಂಬಲಗಳು ಬೇಕೇಬೇಕು.
ಕವಿ ಕಯ್ಯಾರರ ಜನ್ಮದಿನದ ಸಂದರ್ಭದಲ್ಲಿ ಅವರ ಬಗ್ಗೆ ಒಂದಿಷ್ಟು ಮೆಲುಕುಗಳು ಇಲ್ಲಿವೆ:
ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರು, ಅಖಿಲ ಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಕಯ್ಯಾರ ಕಿಞ್ಞಣ್ಣ ರೈ ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ 1915 ಜೂನ್ 8 ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಕಯ್ಯಾರರು ಉಞ್ಞಕ್ಕ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿ ಆರು ಮಂದಿ ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳ ತುಂಬು ಸಂಸಾರದೊಂದಿಗೆ ಬದಿಯಡ್ಕ ಪೆರಡಾಲ "ಕವಿತಾ ಕುಟೀರ"ದಲ್ಲಿ ಶತಮಾನದ ಸಾರ್ಥಕ ಬದುಕನ್ನು ಬಾಳಿದರು.
ರೈಗಳ ಮನೆಮಾತು ತುಳು. ರೈಗಳು ಹಲವು ತುಳು ಕವನಗಳನ್ನು, ಲೇಖನಗಳನ್ನು ಬರೆದಿದ್ದಾರೆ. 'ಪರಿವು ಕಟ್ಟುಜಿ, ರಡ್ಡ್ ಕಣ್ಣ್ಡ್' 'ಸಾರೊ ಎಸಳ್ದ ತಾಮರೆ' 'ಲೆಪ್ಪುನ್ಯೇರ್?' 'ಬತ್ತನೊ ಈ ಬರ್ಪನೊ' - ರೈಗಳ ಕೆಲವು ತುಳು ಕವನಗಳು. ರೈಗಳ ಕನ್ನಡ ಕವಿತೆಗಳಲ್ಲಿ ಹೆಚ್ಚಾಗಿ ಕಾಣಸಿಗದ ಪ್ರಾದೇಶಿಕ ರಂಗು, ಜಾನಪದ ಲೋಕ ಅವರ ತುಳು ಕವಿತೆಗಳಲ್ಲಿ ಅರಳಿಕೊಳ್ಳುತ್ತದೆ. 'ಕನ್ನಡಾಂತರ್ಗತವಾದ ತುಳು ಬದುಕ'ನ್ನು ಒಪ್ಪಿದ ಕವಿ ತುಳು ಭಾಷೆಯ ಸ್ಥಿತಿಗತಿಯ ಬಗ್ಗೆ ವ್ಯಥೆಪಡುತ್ತಾರೆ.
ರೈಯವರು ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿದ್ವಾನ್ ಪದವಿ ಪಡೆದ ಬಳಿಕ ಬಿ.ಎ. ಪದವಿಯನ್ನು ಪಡೆದು ಅಧ್ಯಾಪಕ ತರಬೇತಿಯನ್ನು ಪೂರೈಸಿದರು. ಆನಂತರ ಎಂ.ಎ. ಸ್ನಾತಕೋತ್ತರ ಪದವೀಧರರೂ ಆದರು. ಕಾಸರಗೋಡಿನ ಬಳಿಯ ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಯ್ಯಾರ ಕಿಞ್ಞಣ್ಣ ರೈಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದವರು. ಹರಿಜನ ಸೇವಕ ಸಂಘಟನೆಯಲ್ಲಿ ದುಡಿದಿದ್ದರು. ಸ್ಥಳೀಯ ಪಂಚಾಯತಿಯ ಅಧ್ಯಕ್ಷ ಪದವಿಯನ್ನೂ ಅಲಂಕರಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಸಹ ಹೋರಾಟ ಮಾಡಿದವರು.
'ಕಯ್ಯಾರ ಕಿಞ್ಞಣ್ಣ ರೈ'ಯವರು ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನಲ್ಲದೆ ಒಂದು ತುಳು ಕವನ ಸಂಕಲನವನ್ನೂ ಹೊರ ತಂದಿದ್ದಾರೆ. ಕಾರ್ನಾಡ ಸದಾಶಿವರಾವ್, ರತ್ನರಾಜಿ, ಎ.ಬಿ.ಶೆಟ್ಟಿ ಮೊದಲಾದವರ ಜೀವನ ಚರಿತ್ರೆಗಳನ್ನು ಹಾಗು ಕಥಾಸಂಗ್ರಹಗಳನ್ನು ಬರೆದು ಪ್ರಕಟಿಸಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈಯವರ ಬಗೆಗೆ ಮೂರು ಗ್ರಂಥಗಳನ್ನು ಬರೆದಿದ್ದಾರೆ. ಪಂಚಮಿ ಮತ್ತು ಆಶಾರ ಖಂಡಕಾವ್ಯಗಳು ಎನ್ನುವ ಎರಡು ಅನುವಾದ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯದೃಷ್ಟಿ ಎನ್ನುವ ಲೇಖನ ಸಂಕಲನ ಪ್ರಕಟಿಸಿದ್ದಾರೆ.
ಮಕ್ಕಳ ಪದ್ಯಮಂಜರಿ ಎನ್ನುವ ಮಕ್ಕಳ ಕವನ ಸಂಕಲನ ರಚಿಸಿದ್ದಾರೆ. ಭಾರತ ಭಾರತಿ ಪುಸ್ತಕ ಸಂಪದ ಮಾಲೆಯಲ್ಲಿ ಮಕ್ಕಳಿಗಾಗಿ 'ಪರಶುರಾಮ' ಬರೆದುಕೊಟ್ಟಿದ್ದಾರೆ. ನವೋದಯ ವಾಚನ ಮಾಲೆ ಎನ್ನುವ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಎಂಟು ಪಠ್ಯಪುಸ್ತಕಗಳನ್ನು, ವ್ಯಾಕರಣ ಮತ್ತು ಪ್ರಬಂಧ ಎನ್ನುವ ನಾಲ್ಕು ಕೃತಿಗಳನ್ನು ಹೊರತಂದಿದ್ದಾರೆ. 'ವಿರಾಗಿಣಿ' ಎನ್ನುವುದು ಇವರು ಬರೆದ ನಾಟಕ. 'ದುಡಿತವೆ ನನ್ನ ದೇವರು' ಎನ್ನುವುದು ರೈಯವರ ಆತ್ಮಕಥನ. ಇದಲ್ಲದೆ ವಿವಿಧ ಪತ್ರಿಕೆಗಳಿಗೆ ಇವರು ಬರೆದ ಲೇಖನಗಳ ಸಂಖ್ಯೆಯೇ ಐದು ಸಾವಿರದಷ್ಟಾಗುತ್ತದೆ.
1969 ರಲ್ಲಿ ರೈಯವರಿಗೆ 'ಶ್ರೇಷ್ಠ ಅಧ್ಯಾಪಕ ರಾಷ್ಟ್ರಪ್ರಶಸ್ತಿ' ಲಭಿಸಿತು. ಅದೇ ವರ್ಷ 'ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ'ಯೂ ಲಭಿಸಿತು. 1985 ರಲ್ಲಿ 'ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ' ದೊರೆಯಿತು. ಕಯ್ಯಾರ ಕಿಞ್ಞಣ್ಣ ರೈಯವರು 1997ರಲ್ಲಿ ಮಂಗಳೂರಿನಲ್ಲಿ ಜರುಗಿದ' 66 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು'. 2005 ರಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ದೊರೆಯಿತು. 2006 ರಲ್ಲಿ ಹಂಪಿ ವಿಶ್ವವಿದ್ಯಾಲಯದ, ನಾಡೋಜ ಪ್ರಶಸ್ತಿ, ಕರ್ನಾಟಕ ಸರಕಾರದ ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಲಭಿಸಿವೆ.
2014 ರ, ಜೂನ್ ತಿಂಗಳ 8ನೇ ತಾರೀಖಿನ ಭಾನುವಾರ, ಜನ್ಮ ಶತಮಾನೋತ್ಸವ ಹಾಗೂ 2013 ನೆ ಸಾಲಿನ "ಪಂಪ ಪ್ರಶಸ್ತಿ" ಪ್ರದಾನ ಸಮಾರಂಭ ಕವಿ ಮನೆ ಇರುವ "ಕವಿತಾ ಕುಟೀರ" , ಬದಿಯಡ್ಕದಲ್ಲಿ ನಡೆದಿತ್ತು. ಒಂದು ವೇಳೆ ಈಗ ಕಯ್ಯಾರರು ಬದುಕಿದ್ದರೆ ಅವರಿಗೆ 108 ವರ್ಷ ವಯಸ್ಸಾಗಿರುತ್ತಿತ್ತು.
- ಕಾರ್ತಿಕ್ ಕುಮಾರ್ ಕೆ., ದುರ್ಗಾನಿಲಯ ಕಡೆಕಲ್ಲು
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ