ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2022-23ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್ಗಳ ಒಟ್ಟು ವ್ಯವಹಾರ 105025.31 ಕೋಟಿರೂ. ಆಗಿದೆ. ಜಿಲ್ಲೆಯಲ್ಲಿ ಒಟ್ಟು 638 ಬ್ಯಾಂಕ್ ಶಾಖೆಗಳಿದ್ದು, ಒಟ್ಟು ಠೇವಣಿ ಮೊತ್ತ 63,310 ಕೋಟಿ ರೂ.ಗಳಾಗಿದ್ದು, ಇದು ವರ್ಷದಿಂದ ವರ್ಷಕ್ಕೆ ಶೇ. 9.96ರಷ್ಟು ಬೆಳವಣಿಗೆಯನ್ನು ಕಂಡಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಶೆಟ್ಟಿ ಸಭೆಯಲ್ಲಿ ಮಾಹಿತಿ ನೀಡಿದರು.
ಈ ಅವಧಿಯಲ್ಲಿ ಆದ್ಯತಾ ಹಾಗೂ ಆದ್ಯೇತರ ವಲಯಗಳಲ್ಲಿ ಒಟ್ಟು 39,991.39 ಕೋಟಿ ರೂ. ಸಾಲ ವಿತರಿಸಲಾಗಿದ್ದು, 21,023 ಕೋಟಿ ರೂ.ಗಳ ವಾರ್ಷಿಕ ಗುರಿಯನ್ನು ಮೀರಿ ಸಾಧನೆ ಮಾಡಲಾಗಿದೆ. ಕೃಷಿ ಕ್ಷೇತ್ರಕ್ಕೆ ನಿಗದಿ ಪಡಿಸಲಾಗಿದ್ದ ವಾರ್ಷಿಕ ಗುರಿಯಾದ 6,651.10 ಕೋಟಿ ರೂ.ಗೆ ಬದಲಾಗಿ 10,057.42 ಕೋಟಿ ರೂ. ಸಾಲ ವಿತರಿಸಲಾಗಿದೆ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಯಡಿ 5209.84 ಕೋಟಿರೂ. ಸಾಲ ವಿತರಣೆಯಾಗಿದ್ದು, ಶೇ. 99.91ರಷ್ಟು ನಿಗದಿತ ಗುರಿಯನ್ನು ಸಾಧಿಸಲಾಗಿದೆ. ಮುದ್ರಾ ಯೋಜನೆಯಡಿ 33173 ಖಾತೆಗಳಲ್ಲಿ 596.19 ಕೋಟಿ ರೂ. ಸಾಲ ವಿತರಿಸಲಾಗಿದೆ. ಅಟಲ್ ಪಿಂಚಣಿ ಯೋಜನೆಯಡಿ ಒಟ್ಟು 145288 ಖಾತೆಗಳನ್ನು ತೆರೆಯಲಾಗಿದೆ ಎಂದು ಅವರು ವಿವರಿಸಿದರು.
10 ರೂ. ನಾಣ್ಯಗಳು ನಕಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವುಗಳ ಚಲಾವಣೆಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಆರ್ಬಿಐ ಮ್ಯಾನೇಜರ್ ತನು ನಂಜಪ್ಪ ಬ್ಯಾಂಕ್ಗಳಿಗೆ ಕರೆ ನೀಡಿದರು.
ಸಭೆಯಲ್ಲಿ ನಬಾರ್ಡ್ ಡಿಡಿಎಂ ಸಂಗೀತ ಕರ್ತಾ, ಲೀಡ್ ಬ್ಯಾಂಕ್ ಆದ ಕೆನರಾ ಬ್ಯಾಂಕ್ನ ಜನರಲ್ ಮ್ಯಾನೇಜರ್ ಸುಧಾಕರ ಕೊಟ್ಟಾರಿ ಉಪಸ್ಥಿತರಿದ್ದರು. ವಿವಿಧ ಬ್ಯಾಂಕುಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ