ಮಂಗಳೂರು: ನಾಗರೀಕರೆಲ್ಲರೂ ಬ್ಯಾಂಕ್ ಖಾತೆಗಳನ್ನು ತೆರೆಯಬೇಕೆನ್ನುವ ಉದ್ದೇಶದಿಂದ ಜಾರಿಗೊಳಿಸಲಾದ ಜನಧನ್ ಯೋಜನೆಯಡಿ ಆಯಾ ಬ್ಯಾಂಕ್ ಶಾಖೆಗಳಿಗೆ ನಿಗದಿ ಪಡಿಸಲಾದ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಜೂ.30ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಸಮಾಲೋಚನಾ ಸಮಿತಿ(ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ(ಡಿಎಲ್ಆರ್ಸಿ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅತ್ಯಂತ ಕಡಿಮೆ ಪ್ರೀಮಿಯಂ ಮೊತ್ತದ ಸುರಕ್ಷಾ, ಜೀವನ್ ಜ್ಯೋತಿ ಮೊದಲಾದ ವಿಮಾ ಯೋಜನೆಗಳಿಗೆ ಸಂಬಂಧಿಸಿ ಆಯಾ ಶಾಖೆಗಳಿಗೆ ನಿಗದಿಪಡಿಸಿದ ಗುರಿಯನ್ನು ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ ಅವರು, ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಲ್ಲಿ ಪ್ರತಿಯೊಬ್ಬರು ಬ್ಯಾಂಕ್ ಖಾತೆಗಳನ್ನು ಹೊಂದಿರುವುದು ಅತೀ ಅಗತ್ಯವಾಗಿದ್ದು, ಸಾಮಾಜಿಕ ಕಳಕಳಿಯ ಯೋಜನೆಗಳ ಬಗ್ಗೆ ಬ್ಯಾಂಕ್ಗಳು ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದಿಂದ ದೊರೆಯುವ ಸಬ್ಸಿಡಿ ಸಹಿತ ಸಾಲ, ಬಡ್ಡಿ ರಹಿತ ಅಥವಾ ಕಡಿಮೆ ಬಡ್ಡಿಯ ಸಹಾಯಧನ ಕ್ಲಪ್ತ ಸಮಯದಲ್ಲಿ ಫಲಾನುಭವಿಗಳಿಗೆ ದೊರೆಯುವಂತಾಗಬೇಕು. ಅರ್ಜಿ ಹಾಕಿ ಬ್ಯಾಂಕ್ಗಳಿಗೆ ಅಲೆಯುವಂತೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದರು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ