ಮಂಗಳೂರು: ಯೋಗಕಲೆಯ ಪ್ರಚಾರ ಹಾಗೂ ಪ್ರಸಾರದಲ್ಲಿ ಸಾರ್ಥಕ 40 ವರ್ಷಗಳನ್ನು ಪೂರೈಸಿರುವ ಖ್ಯಾತ ಯೋಗ ಶಿಕ್ಷಕ ಹಾಗೂ ಅಂತಾರಾಷ್ಟ್ರೀಯ ಯೋಗ ತರಬೇತುದಾರ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರಿಗೆ ದೇಲಂಪಾಡಿ ಯೋಗ ಪ್ರತಿಷ್ಠಾನವು ರಾಮಕೃಷ್ಣ ಮಠ, ಮಂಗಳೂರು ಇದರ ಸಹಯೋಗದೊಂದಿಗೆ ಗೌರವಾಭಿವಂದನೆ ಕಾರ್ಯಕ್ರಮವು ಇಂದು (ಆಗಸ್ಟ್ 7) ಸಂಜೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳು ಹಾಗೂ ಗೋಪಾಲಕೃಷ್ಣ ದೇಲಂಪಾಡಿಯವರ ಶಿಷ್ಯರಾದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಐ.ಎ.ಎಸ್. ಅವರು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸಿ. ಎ. ಸುಧೀರ್ ಕುಮಾರ್ ಶೆಟ್ಟಿ ಅವರು ಆಗಮಿಸಿದ್ದರು. 1983 ರಲ್ಲಿ ಮಂಗಳೂರಿನ ಮಂಗಳಾದೇವಿಯ ರಾಮ ಸದನದಲ್ಲಿ ಯೋಗ ತರಬೇತಿಯ ಪಯಣವನ್ನು ಆರಂಭಿಸಿದ ಗೋಪಾಲಕೃಷ್ಣ ದೇಲಂಪಾಡಿಯವರು ಇದೀಗ ಅದೇ ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ಯೋಗ ತರಬೇತಿಯನ್ನು ನೀಡುತ್ತಿರುವುದು ವಿಶೇಷ.
ಇಲ್ಲಿಯವರೆಗೆ ಮೂರು ಲಕ್ಷಕ್ಕೂ ಹೆಚ್ಚು ಮಂದಿಗೆ ಯೋಗ ತರಬೇತಿ ನೀಡಿ ಸುಮಾರು 2250 ಕ್ಕೂ ಹೆಚ್ಚು ಯೋಗ ಶಿಬಿರಗಳನ್ನು ಆಯೋಜಿಸಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ತರಬೇತಿ ನೀಡಿ ಸುದೀರ್ಘ ನಾಲ್ಕು ದಶಕಗಳ ಕಾಲ ಸಮಾಜಕ್ಕೆ ಸೇವೆ ಸಲ್ಲಿಸಿರುವ ಗೋಪಾಲಕೃಷ್ಣ ದೇಲಂಪಾಡಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.
ಈ ಕಾರ್ಯಕ್ರಮದಲ್ಲಿ ಗೋಪಾಲಕೃಷ್ಣ ದೇಲಂಪಾಡಿಯವರ ಶಿಷ್ಯವೃಂದ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ರಾಮಕೃಷ್ಣ ಮಠದ ಸಭಾಂಗಣದಲ್ಲಿ ಮುಂದಿನ ಹದಿನೈದು ದಿನಗಳ ಕಾಲ ನಡೆಯುವ ಯೋಗ ಶಿಬಿರ ಉದ್ಘಾಟನೆಗೊಂಡಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ