ಪುತ್ತೂರು: ಚಂದ್ರಯಾನ-3 ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಚಾರಿತ್ರಿಕ ಘಟನೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು.
ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಚಂದ್ರಯಾನ-3ರ ಯಶಸ್ಸಿನಲ್ಲಿ ಭಾಗಿಗಳಾದ ಎಲ್ಲಾ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತಾಡಿದರು. 2019ರ ಚಂದ್ರಯಾನ-2ರ ನಂತರ ಆರಂಭವಾದ ಈ ಮಹೋನ್ನತ ಅಭಿಯಾನದಲ್ಲಿ ಪಾಲ್ಗೊಂಡ ಎಲ್ಲಾ ವಿಜ್ಞಾನಿಗಳು, ಅದರ ಹಿಂದಿನ ಪ್ರೇರಕ ಶಕ್ತಿಗಳು ಹಾಗೂ ಎಲ್ಲಾ ಜನತೆಗೆ ಸಂಭ್ರಮದ ಕ್ಷಣ ಎಂದು ಅವರು ನುಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಮಾತನಾಡಿ ನಮ್ಮ ಸಹಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿಯೊಬ್ಬರು ಚಂದ್ರಯಾನದ ಭಾಗವಾಗಿದ್ದು ನಮಗೆ ಹೆಮ್ಮೆಯ ವಿಷಯ ಎಂದರು. ಸಾಧನೆಯೊಂದಿಗೆ ಪ್ರೋತ್ಸಾಹ ಹಾಗೂ ಹಾರೈಕೆಗಳು ಸೇರಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದರು.
ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ ವಿಶ್ವದಲ್ಲಿಯೇ ನಮ್ಮ ಬಾಹ್ಯಾಕಾಶ ಸಂಸ್ಥೆಯು ಗುರುತಿಸಲ್ಪಟ್ಟಿದೆ ಅಲ್ಲದೆ ದೇಶದ ಸಾಧನೆಯನ್ನು ಎಲ್ಲರೂ ಮುಕ್ತ ಕಂಠದಿಂದ ಶ್ಲಾಗಿಸುತ್ತಿದ್ದಾರೆ ಇದೆಲ್ಲವೂ ದೇಶವಾಸಿಗಳಾದ ನಮಗೆ ಹೆಮ್ಮೆಯ ವಿಷಯ. ಇದಕ್ಕೆ ಕಾರಣಕರ್ತರಾದವರೆಲ್ಲರೂ ಅಭಿನಂದನಾರ್ಹರು ಎಂದರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ವಿದ್ಯಾರ್ಥಿಗಳೆಲ್ಲರಿಗೂ ವೈಯಕ್ತಿಕ ನೆಲೆಯಲ್ಲಿ ಸಿಹಿ ವಿತರಿಸಿ ಶುಭ ಹಾರೈಸಿದರು.
ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ ಚಂದ್ರಯಾನ ನಡೆದುಬಂದ ದಾರಿಯನ್ನು ವಿವರಿಸಿದರು.
ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಯೊಂದಿಗೆ ಸಂಭ್ರಮಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ