ಉಡುಪಿ: ಮಹಿಳೆಯರ, ಮಕ್ಕಳ ರಕ್ಷಣೆಗಿರುವ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Upayuktha
0



ಉಡುಪಿ: ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸ ಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚಿಸಿದರು.



ಅವರು ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ನೊಂದ ಮಹಿಳೆಯರಿಗೆ ನೆರವು ನೀಡಲು ಜಿಲ್ಲೆಯಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ಅನ್ನು ಆರಂಭಿಸಲಾಗಿದ್ದು, ಸಂಕಷ್ಟದಲ್ಲಿರುವ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ ಅವರು, 2022 ರ ಅಕ್ಟೋಬರ್ ನಿಂದ ಈವರೆಗೆ ಮಹಿಳೆಯರ ಮೇಲಿನ ದೌರ್ಜನ್ಯದ ಒಟ್ಟು 233 ಪ್ರಕರಣಗಳು ದಾಖಲಾಗಿದ್ದು, 181 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಬಾಕಿ ಉಳಿದ ಇತರೆ ಪ್ರಕರಣವನ್ನು ತ್ವರಿತಗತಿಯಲ್ಲಿ ಇತ್ಯರ್ಥ ಮಾಡುವಂತೆ ತಿಳಿಸಿದರು.



ಶಾಲೆ ಬಿಟ್ಟ ಮಕ್ಕಳು ಹಾಗೂ ಬಾಲ ಕಾರ್ಮಿಕರು ಬಾಲ್ಯ ವಿವಾಹಕ್ಕೆ ಒಳಪಡುವ ಸಾಧ್ಯತೆ ಇದ್ದು, ಅವರುಗಳಿಗೆ ಆಪ್ತ ಸಮಾಲೋಚನೆ ನಡೆಸಿ, ಶಿಕ್ಷಣದ ಮಹತ್ವ ಕುರಿತು ಅರಿವು ಮೂಡಿಸಿ ಅವರನ್ನು ಮರಳಿ ಶಾಲೆಗೆ ಕರೆತರಲು ಮನವೊಲಿಸಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಕಡಿಮೆ ಇದೆ ಎಂದು ನಿರ್ಲಕ್ಷ್ಯ ವಹಿಸದೆ, ಗ್ರಾಮ ಪಂಚಾಯತಿಗಳು ಆಗಾಗ ಸಭೆಯನ್ನು ನಡೆಸಿ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಿ, ಬಾಲ್ಯ ವಿವಾಹ ತಡೆಗಟ್ಟಲು ಪ್ರಯತ್ನಿಸಬೇಕು ಎಂದರು.



ದೇವಸ್ಥಾನಗಳಲ್ಲಿ ಮದುವೆಗಳನ್ನು ಏರ್ಪಡಿಸುವ ಸಂದರ್ಭದಲ್ಲಿ ಅನುಮಾನ ಬಂದಲ್ಲಿ ಅರ್ಚಕರುಗಳು ಜನನ ಪ್ರಮಾಣ ಪತ್ರವನ್ನು ಪರಿಶೀಲಿಸಿ ಮದುವೆ ನಡೆಸಬೇಕು. ಇಲ್ಲವಾದಲ್ಲಿ ಬಾಲ್ಯ ವಿವಾಹ ನಡೆಸಿದ ದೇವಸ್ಥಾನದ ಅರ್ಚಕರನ್ನು ಶಿಕ್ಷೆಗೆ ಒಳಪಡಿಸಲಾಗುವುದು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಕುರಿತು ನಿಗಾ ವಹಿಸಬೇಕು. ಇಲ್ಲವಾದಲ್ಲಿ ಅವರುಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಕಟಪಾಡಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ನಿರ್ಮಾಣ ಕಾಮಗಾರಿಯು ಅಪೂರ್ಣಗೊಂಡಿದ್ದು, ಉಸ್ತುವಾರಿ ಸಚಿವರ ಸೂಚನೆಯಂತೆ ಆದ್ಯತೆಯ ಮೇಲೆ ಕೈಗೊಂಡು ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.



ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಡಿವೈಎಸ್‌ಪಿ ದಿನಕರ್ ಪಿ.ಕೆ, ವಿವಿಧ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸಂಸ್ಥೆಯ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
To Top