ಹೈನುಗಾರಿಕೆ ಅಭಿವೃದ್ಧಿಗೆ ಧರ್ಮಸ್ಥಳದಿಂದ ವಿಶೇಷ ನೆರವು, ಪ್ರೋತ್ಸಾಹ, ಕ್ರಾಂತಿಕಾರಿ ಸುಧಾರಣೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ನೆರವು, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ವಿಭಾಗದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 9 ತಾಲ್ಲೂಕುಗಳಿಗೆ ತಲಾ 5 ರಂತೆ ಒಟ್ಟು 45 ದ್ರವ ಸಾರಜನಕ ಜಾಡಿಗಳನ್ನು ವಿತರಿಸಿ ಮಾತನಾಡಿದರು.
ರೈತರಿಗೆ ನಿತ್ಯ ಆದಾಯ ಕೊಡುವ ಹಾಲು, ಹಣ್ಣು ಮತ್ತು ಹೂವಿನ ಗಿಡಗಳ ಬೆಳವಣಿಗೆ ಪ್ರೋತ್ಸಾಹ ನೀಡಲಾಗುತ್ತದೆ. ತಮ್ಮ ಸಂಸದರ ನಿಧಿಯಿಂದ ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ 2 ಕೋಟಿ 45 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.
ಅಧಿಕ ಆದಾಯ ಪಡೆಯಲು ರೈತರಿಗೆ ಹೈನುಗಾರಿಕೆ ಅನಿವಾರ್ಯ. ಧರ್ಮಸ್ಥಳದಿಂದಾಗಿ ಇಡಿ ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಕ್ರಾಂತಿಕಾರಿ ಸುಧಾರಣೆಯಾಗಿದೆ. ದೇಶೀತಳಿ, ಮಿಶ್ರತಳಿ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನ ಬಳಕೆಯಿಂದ ಹೈನುಗಾರಿಕೆಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿದರು.
ಎಲ್ಲಾ ರುಡ್ಸೆಟ್ ಸಂಸ್ಥೆಗಳಲ್ಲಿ, ಸಿದ್ಧವನಗುರುಕುಲ ಹಾಗೂ ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಕೂಡಾ ಹೈನುಗಾರಿಕೆ ಬಗ್ಯೆ ತರಬೇತಿ ನೀಡಲಾಗುತ್ತಿದೆ ಎಂದು ಹೆಗ್ಗಡೆಯವರು ತಿಳಿಸಿದರು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ಡಾ. ಅರುಣ್ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 398 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ ಎರಡೂವರೆ ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ ಇದೆ. ಹೈನುಗಾರಿಕೆಯಿಂದ ಗ್ರಾಮೀಣ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಡಾ. ಹೆಗ್ಗಡೆಯವರ ಪ್ರೋತ್ಸಾಹವನ್ನು ಇಲಾಖೆ ವತಿಯಿಂದ ಅವರು ಕೃತಜ್ಞತೆಯಿಂದ ಸ್ಮರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಧರ್ಮಸ್ಥಳದ ಪ್ರೋತ್ಸಾಹದಿಂದಾಗಿ ಹೈನುಗಾರಿಕೆ ಅಭಿವೃದ್ಧಿಯಲ್ಲಿ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.
ಹೇಮಾವತಿ ವೀ. ಹೆಗ್ಗಡೆ ಸಿ.ಇ.ಒ. ಅನಿಲ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಧನ್ಯವಾದವಿತ್ತರು. ನಿರ್ದೇಶಕ ಶಿವಾನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ