ಕನ್ನಡ ಭಾಷೆ, ಸಂಸ್ಕೃತಿ ಕಲಿಕೆ ಅಗತ್ಯ : ಡಾ. ಸುಬ್ರಹ್ಮಣ್ಯ ಕೆ.

Upayuktha
0

     ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕನ್ನಡ ಸಂಘ ಉದ್ಘಾಟನೆ, ಪದಗ್ರಹಣ



ಉಜಿರೆ: “ಪಾಶ್ಚಾತ್ಯ ಸಾಹಿತ್ಯದೆಡೆಗಿನ ಅತಿಯಾದ ಒಲವಿನ ಪರಿಣಾಮದಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಭಾಷೆ, ಸಂಸ್ಕೃತಿಯನ್ನು ಕಲಿತು, ಉಳಿಸುವುದು ಇಂದಿನ ಅಗತ್ಯವಾಗಿದೆ” ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಕೆ. ಅಭಿಪ್ರಾಯಪಟ್ಟರು.


ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಸೆ.7) ಕನ್ನಡ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ವಾಹಕವೂ ಆಗಿದೆ. ಸಾಹಿತ್ಯ, ಪರಂಪರೆ, ಸಂಸ್ಕೃತಿಯ ಕೊಂಡಿಯಾಗಿರುವ ವಿದ್ಯಾರ್ಥಿಗಳು ಸಂಸ್ಕೃತಿಯನ್ನು ಅರಿತು, ಭಾಷೆಯ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.


“2,300 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಕಲಿಯುವುದು ನಮ್ಮ ಹೆಮ್ಮೆ. ಪ್ರಾಚೀನ ಸಾಹಿತ್ಯದ ಪದಗಳಲ್ಲಡಗಿರುವ ಅರ್ಥವನ್ನು ಹುಡುಕುವ, ಆಲೋಚಿಸುವ, ವಿಮರ್ಶಿಸುವ ಮನೋಭಾವ ನಮ್ಮಲ್ಲಿರಬೇಕು. ಅಧ್ಯಾಪಕರು ಕೂಡ ಅಧ್ಯಯನಶೀಲರಾಗಿ ವಿದ್ಯಾರ್ಥಿಗಳನ್ನು ಪ್ರೇರಿಸಬೇಕು" ಎಂದು ಅವರು ಕಿವಿಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, "ವಿದ್ಯಾರ್ಥಿಗಳು ಓದುವ, ಬರೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ವಿಶೇಷವಾಗಿ, ವ್ಯಾಕರಣದ ಬಗ್ಗೆ ಅಧ್ಯಯನ ಮಾಡುವ ಸಾಹಿತ್ಯದ ವಿದ್ಯಾರ್ಥಿಗಳು ಭಾಷಾ ಸ್ವಚ್ಛತೆ ಬಗ್ಗೆ ಗಮನ ಕೊಡುವುದು ಅಗತ್ಯ” ಎಂದು ಸಲಹೆ ನೀಡಿದರು.


2023-24 ನೇ ಸಾಲಿನ ಕನ್ನಡ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ನಡೆಯಿತು. ಸಂಘದ ಕಾರ್ಯದರ್ಶಿಯಾಗಿ ಜಾನ್ಹವಿ ಎಸ್., ಜತೆ ಕಾರ್ಯದರ್ಶಿಯಾಗಿ ವಿಘ್ನೇಶ ಮತ್ತು ಪದಾಧಿಕಾರಿಗಳಾಗಿ ಉಲ್ಲೇಖ, ಶಂಕರ್, ಜೀವಿತ್ ಹಾಗೂ ಅಮೃತ ನೇಮಕಗೊಂಡರು.


ವೇದಿಕೆಯಲ್ಲಿ ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್., ಕಾರ್ಯಕ್ರಮ ಸಂಯೋಜಕ ಡಾ. ರಾಜಶೇಖರ ಹಳೆಮನೆ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ನಿಶಾ ವಂದಿಸಿ, ರೇಷ್ಮಾ ನಿರೂಪಿಸಿದರು. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top