ಮಂಗಳೂರು: ಮಂಗಳೂರಿನಲ್ಲಿ ನ.18ರಂದು ಬೆಳಗ್ಗೆ 10 ಗಂಟೆಗೆ ಉರ್ವ ಕ್ರಿಕೆಟ್ ಮೈದಾನದಲ್ಲಿ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ. 'ಸಾರ್ವಜನಿಕ- ಖಾಸಗಿ- ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು' ಎಂಬ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.
ಅವರು ಸೋಮವಾರ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಹಕಾರ ಸಪ್ತಾಹದ ವಿವರ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯುತ್ತದೆ.
ಗಣ್ಯರಿಂದ ಉದ್ಘಾಟನೆ:
ಮಂಗಳೂರಿನಲ್ಲಿ ನ.18ರಂದು ನಡೆಯುವ ರಾಜ್ಯಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು, ಇದನ್ನು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನೆರವೇರಿಸಲಿದ್ದಾರೆ. 'ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ'ವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸುವರು.
'ಉತ್ತಮ ಸ್ವ-ಸಹಾಯ ಸಂಘ'ಗಳಿಗೆ ಪುರಸ್ಕಾರವನ್ನು ಮಂಗಳೂರು ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಪ್ರದಾನ ಮಾಡಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷ ಜಿ.ಟಿ. ದೇವೇಗೌಡರು ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು ವಹಿಸುವರು. ಸಹಕಾರ ಜಾಥಾವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ, ಉಡುಪಿ ಶಾಸಕ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ. ಮಂಗಳೂರು ಇದರ ಅಧ್ಯಕ್ಷ ಯಶ್ಪಾಲ್ ಸುವರ್ಣ ಅವರು ಭಾಗವಹಿಸುತ್ತಾರೆ.
ಮಂಗಳೂರು ಮಹಾನಗರಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಅವರು ಉಪಸ್ಥಿತರಿರುತ್ತಾರೆ.
ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಕೆ. ರಾಜೇಂದ್ರ, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭಾಗವಹಿಸುವರು.
ಸಹಕಾರ ಜಾಥಾ:
ಈ ಸಂದರ್ಭದಲ್ಲಿ ಸಹಕಾರ ಜಾಥಾ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿ ಆವರಣದಿಂದ ಉರ್ವ ಕ್ರಿಕೆಟ್ ಮೈದಾನದ ವರೆಗೆ ಸಾಂಸ್ಕೃತಿಕ ಕಲಾಪ್ರಕಾರಗಳ ವಿವಿಧ ಟ್ಯಾಬ್ಲೋಗಳೊಂದಿಗೆ ನಡೆಯಲಿದೆ.
ಹಿನ್ನೆಲೆ:
ಪ್ರತಿ ವರ್ಷ ನವೆಂಬರ್ 14ರಿಂದ 20ರ ವರೆಗೆ ರಾಷ್ಟ್ರಾದ್ಯಂತ 'ಅಖಿಲ ಭಾರತ ಸಹಕಾರ ಸಪ್ತಾಹ'ವನ್ನು ಆಚರಿಸಲಾಗುತ್ತಿದ್ದು, ಪಂಡಿತ್ ನೆಹರೂ ಅವರ ಜನ್ಮದಿನವಾದ ನ.14ರಂದು ಸಪ್ತಾಹದ ಉದ್ಘಾಟನೆ ನಡೆಯುತ್ತದೆ.
ಸಪ್ತಾಹದ ಅವಧಿಯಲ್ಲಿ ಸಹಕಾರ ಚಳವಳಿ ನಡೆದು ಬಂದ ಹಾದಿಯ ಬಗ್ಗೆ ಅವಲೋಕನ ನಡೆಸಿ ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಬಗ್ಗೆ ಚಿಂತನೆ ನಡೆಸುವುದೇ ಸಹಕಾರಿ ಸಪ್ತಾಹದ ಮುಖ್ಯ ಉದ್ದೇಶವಾಗಿರುತ್ತದೆ.
70ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು '5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿಯ ಗುರಿಗಳು' ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿ ರಾಜ್ಯ ಮಟ್ಟದ ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ