ಗ್ರಂಥಾಲಯ ಜ್ಞಾನದ ಭಂಡಾರ : ಉಡುಪಿ ಡಿಸಿ ಡಾ. ಕೆ ವಿದ್ಯಾಕುಮಾರಿ

Upayuktha
0


ಉಡುಪಿ: ಗ್ರಂಥಾಲಯ ಜ್ಞಾನದ ಭಂಡಾರ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಜ್ಞಾನದ ಭಂಡಾರವನ್ನು ಹೆಚ್ಚಿಸಿಕೊಳ್ಳುವಂತೆ  ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. 


ಅವರು ಬುಧವಾರ ನಗರದ ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ರಾಷ್ಟೀಯ ಗ್ರಂಥಾಲಯ ಸಪ್ತಾಹ ಸಮಾರಂಭ -2023 ರ ಅಂಗವಾಗಿ ಸಿಬ್ಬಂದಿ ಸೇವಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಉತ್ತಮ ಓದುಗ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ, ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.


ದೇಶ ಸುತ್ತು ಕೋಶ ಓದು ಎಂಬ ಶಿವರಾಮ ಕಾರಂತರ ಮಾತಿನಂತೆ, ಕೋಶ ಎಂದರೆ ಗ್ರಂಥಾಲಯ. ಇಲ್ಲಿ ಓದಿದಾಗ ಜ್ಞಾನ ವಿಸ್ತಾರವಾಗುತ್ತದೆ. ಹಾಗೆಯೇ ದೇಶ ಸುತ್ತುವುದರಿಂದ ಪ್ರತಿಯೊಬ್ಬರ ಜನಜೀವನ ಶೈಲಿಯನ್ನು ಅರ್ಥೈಸಿಕೊಳ್ಳಬಹುದಾಗಿದೆ ಎಂದರು.


ಜಿಲ್ಲೆಯಲ್ಲಿ ಅತ್ಯುತ್ತಮ ಶೈಲಿಯಲ್ಲಿ, ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನೊಳಗೊಂಡಂತೆ ಗ್ರಂಥಾಲಯದ ಕಟ್ಟಡವನ್ನು ನಿರ್ಮಿಸಿದ್ದು, ಇಲ್ಲಿ ಸಾಕಷ್ಟು ಅತ್ಯುತ್ತಮ ಪುಸ್ತಕಗಳ ಸಂಗ್ರಹಣೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರಿಗೆ ಹಾಗೂ ಓದುಗರಿಗೆ ಸಹ ಉತ್ತಮ ಪರಿಸರ ವ್ಯವಸ್ಥೆ ಇದೆ. ಎಲ್ಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಗಳಲ್ಲಿರುವ ಗ್ರಂಥಾಲಯಗಳಲ್ಲಿಯೂ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿಯೂ ಸಕ್ರೀಯವಾಗಿ ಭಾಗವಹಿಸುವಂತೆ ತಿಳಿಸಿದರು.


ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಸಕಾರಾತ್ಮಕವಾಗಿ ಯೋಚನೆ ಮಾಡಬೇಕು. ಇದರಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜೊತೆಗೆ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಯಲ್ಲಿರುವ ಗ್ರಂಥಾಲಯಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದರು. 


ಸೃಜನಶೀಲ ಬರಹಗಾರರಾದ ಜೆ. ಪಿ ರಾವ್ ಅವರು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗ್ರಂಥಾಲಯಗಳ ಪಾತ್ರ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. 


ಕಾರ್ಯಕ್ರಮದಲ್ಲಿ ನಿವೃತ್ತ ಸಿಬ್ಬಂದಿ ಜಗದೀಶ್ ಭಟ್ ಕೆ, ಗ್ರಂಥಾಲಯದ ಉತ್ತಮ ಸಿಬ್ಬಂದಿ ಸೇವಾ ಪುರಸ್ಕಾರಕ್ಕೆ ಆಯ್ಕೆಯಾದ ಸುಲೇಖಾ ದಯಾನಂದ್, ಅಹಲ್ಯಾ ಅಮೀನ್ ಹಾಗೂ ಪ್ರಭಾ, ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿದ ಆಶಾ ಹಾಗೂ ಉತ್ತಮ ಓದುಗ ಪ್ರಶಸ್ತಿಗೆ ಆಯ್ಕೆಯಾದ ಶ್ರೀಮತಿ ದೇವಿ ಮತ್ತು ಲಕ್ಷ್ಮೀಶ ಉಪಾಧ್ಯಾಯ ಅವರುಗಳನ್ನು ಸನ್ಮಾನಿಸಲಾಯಿತು.


ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲೆ, ಕನ್ನಡ ಪುಸ್ತಕ ಓದಿ ವಿಷಯ ತಿಳಿಸುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸಾರ್ವಜನಿಕ ಮಕ್ಕಳಿಗೆ ಪಾಸ್ಸಿಂಗ್ ದಿ ಬಾಲ್, ಸಂಗೀತ ಕುರ್ಚಿ ಹಾಗೂ ಚಿತ್ರಕಲಾ ಸ್ಪರ್ಧೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು.


ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ, ಶಾಲಾ –ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜೆ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ರಂಜಿತ ಸಿ ನಿರೂಪಿಸಿ, ಸುನೀತ ಬಿ.ಎಸ್ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top