'ಮುಂಜಾಗ್ರತೆ ವಹಿಸುವ ಮೂಲಕ ಹೆಚ್.ಐ.ವಿ ಏಡ್ಸ್‌ನಿಂದ ದೂರ ಉಳಿಯಲು ಸಾಧ್ಯ'

Upayuktha
0


ಉಡುಪಿ: ಏಡ್ಸ್ ಒಂದು ಮಾರಕ ಕಾಯಿಲೆಯಾಗಿದ್ದು, ಕಾಯಿಲೆ ಬರದಂತೆ   ಮುಂಜಾಗ್ರತೆ ವಹಿಸುವುದರಿಂದ ರೋಗದಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.


ಅವರು ಶುಕ್ರವಾರ ನಗರದ ಅಂಬಲಪಾಡಿಯ ಪ್ರಗತಿ ಸೌಧ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ & ಕಾಲೇಜ್ ಆಫ್ ನರ್ಸಿಂಗ್, ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಪ್ರಗತಿ ಸೌಧ, ಲಯನ್ಸ್ ಕ್ಲಬ್ ಉಡುಪಿ ಲಕ್ಷö್ಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ - ಜಾಥಾ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ತಮ್ಮದಲ್ಲದ ತಪ್ಪಿನಿಂದಾಗಿ ಹಲವರು ಏಡ್ಸ್ ರೋಗಕ್ಕೆ ತುತ್ತಾಗುತ್ತಾರೆ. ಅಸುರಕ್ಷಿತ ಲೈಂಗಿಕತೆ, ಸೋಂಕಿತರ ರಕ್ತವನ್ನು ಪರೀಕ್ಷೆ ಮಾಡದೇ ಪಡೆಯುವುದರಿಂದ, ಆಸ್ಪತ್ರೆಗಳಲ್ಲಿ ಸಂಸ್ಕರಣೆ ಮಾಡದ ಸಿರಿಂಜ್ ಬಳಕೆ, ಸೋಂಕಿತ ತಾಯಿಯಿಂದ ಮಗುವಿನ ಗರ್ಭಾವಸ್ಥೆಯಲ್ಲಿ, ಹೆರಿಗೆ ಸಮಯದಲ್ಲಿ ಅಥವಾ ಎದೆ ಹಾಲಿನ ಮೂಲಕ ರೋಗ ಹರಡುತ್ತದೆ. ಜಿಲ್ಲೆಯಲ್ಲಿಯೂ ಸಹ ಏಡ್ಸ್ ರೋಗಿಗಳಿದ್ದು, ಅವರುಗಳು ಮಾನಸಿಕ ಹಿಂಸೆಗೆ ಒಳಗಾಗುತ್ತಾರೆ. ಅವರನ್ನು ದೂರ ತಳ್ಳದೇ ನಮ್ಮಲ್ಲಿ ಒಬ್ಬರನ್ನಾಗಿ ನೋಡಬೇಕು. ಕಾಯಿಲೆ ಖಚಿತವಾದ ನಂತರ ಸರಿಯಾದ ಚಿಕಿತ್ಸೆ ಪಡೆದು, ಆತ್ಮವಿಶ್ವಾಸದಿಂದ ರೋಗವನ್ನು ಎದುರಿಸಬೇಕು ಎಂದರು.


ಯುವ ಜನತೆ ಕ್ಷಣಿಕ ಸುಖಕ್ಕಾಗಿ ಬಲಿಯಾಗಬಾರದು. ಏಡ್ಸ್ ರೋಗದ ಕುರಿತು ಅರಿವು ಹೊಂದುವುದರ ಜೊತೆಗೆ ಸಾರ್ವಜನಿಕರಿಗೆ, ರೋಗಿಗಳಿಗೆ ಏಡ್ಸ್ ರೋಗ ಹರಡುವ ಕುರಿತು ಹಾಗೂ ತಡೆಗಟ್ಟಲು ಇರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಅವರುಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು. 


ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಮಾತನಾಡಿ, ಹೆಚ್.ಐ.ವಿ ಸೋಂಕಿನಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಹಲವು ರೋಗಗಳಿಗೆ ಒಳಗಾಗುತ್ತಾರೆ. ಹೆಚ್.ಐ.ವಿ ಸೋಂಕಿತರು ನಮ್ಮಂತೆಯೇ ಮನುಷ್ಯರು. ಅವರುಗಳಿಗೂ ಬದುಕುವ ಅರ್ಹತೆ ಇದೆ. ಅಸ್ಪೃಷ್ಯರಂತೆ ಕಾಣದೇ ಅವರುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದರು. 


ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮ್ಯಾರಾಥಾನ್, ಕ್ವಿಜ್, ಪ್ರಬಂಧ ಸ್ಪರ್ಧೆ, ನಾಟಕ ಹಾಗೂ ರೀಲ್ಸ್ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಹೆಚ್.ಐ.ವಿ ಪರೀಕ್ಷೆ ನಡೆಸಲಾಗುತ್ತಿದ್ದು, ಇದರ ಪ್ರಯೋಜನವನ್ನು ಪಡೆಯುವಂತೆ ಹಾಗೂ ಸಂದೇಹಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ:1097 ಅನ್ನು ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 


ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿ ಗಣನೀಯ ಸೇವೆ ಸಲ್ಲಿಸಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಮಿತಾ, ಮಣಿಪಾಲ ಐ.ಸಿ.ಟಿ.ಸಿ ಆಪ್ತ ಸಮಾಲೋಚಕಿ ಅನುರಾಧ ಜಿ, ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ ಪ್ಲಸ್ ಕೇಂದ್ರದ ಹಿರಿಯ ಆಪ್ತ ಸಮಾಲೋಚಕಿ ಮಂಜುಳಾ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಐ.ಸಿ.ಟಿ.ಸಿ ಪ್ರಯೋಗಶಾಲಾ ತಂತ್ರಜ್ಞೆ ಪ್ರತಿಮಾ, ನೊಂದ ಹೆಚ್.ಐ.ವಿ ಸಮುದಾಯಕ್ಕೆ ವಿಶೇಷ ಕಾಳಜಿ ವಹಿಸಿದ ಲಯನ್ಸ್ ಕ್ಲಬ್ ಮಣಿಪಾಲ ಅಧ್ಯಕ್ಷ ಡಾ. ಹೆಚ್ ಗಣೇಶ್ ಪೈ, ಸಂತೆಕಟ್ಟೆ ಪರಿವಾರ ಸಮಾಜ ಕೇಂದ್ರ ಗೊರಟ್ಟೆ ಆಸ್ಪತ್ರೆಯ ಸಿಸ್ಟರ್ ಮೇಲಾನಿಯಾ ಡಿ ಸೋಜಾ ಹಾಗೂ ವಂಡ್ಸೆ ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಅಧ್ಯಕ್ಷ ಸಂಜೀವ್ ವಂಡ್ಸೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ರಾಜೇಂದ್ರ ಕೆ, ಎಂ.ಜಿ.ಎಂ ಕಾಲೇಜು ಎನ್.ಎಸ್.ಎಸ್ ಯೋಜನಾಧಿಕಾರಿ ಸುಚಿತ್ ಕೋಟ್ಯಾನ್ ಮತ್ತು ಬಂಟಕಲ್ ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಎನ್.ಎಸ್.ಎಸ್ ಯೋಜನಾಧಿಕಾರಿ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ವಿಭಾಗೀಯ ಆರೋಗ್ಯ ಮತ್ತು ಕು.ಕ ಸೇವೆಗಳ ನಿರ್ದೇಶನಾಲಯದ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸರ್ಜನ್ ಡಾ. ವೀಣಾ ಕುಮಾರಿ, ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಉಲ್ಲಾಸ್ ಮೆಸ್ತಾ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯಂ  ಅಧ್ಯಕ್ಷ ಲಯನ್ ಧನುಶ್ ಕೆ, ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 


ಮಂಜುನಾಥ ಗಾಣಿಗ ಸ್ವಾಗತಿಸಿ ನಿರೂಪಿಸಿದರೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.


ಕಾರ್ಯಕ್ರಮದ ಅಂಗವಾಗಿ ಬೋರ್ಡ್ ಹೈಸ್ಕೂಲ್‌ನಿಂದ ಕೆ.ಎಂ ಮಾರ್ಗವಾಗಿ ಅಂಬಲಪಾಡಿಯ ರಾಷ್ಟ್ರೀಯ ಸ್ವ-ಸಹಾಯ ಸಂಘ ತರಬೇತಿ ಸಂಸ್ಥೆ ಸಭಾಂಗಣದವರೆಗೆ ನಡೆದ ಏಡ್ಸ್ ಕುರಿತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಚಾಲನೆ ನೀಡಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top