ಧರ್ಮಸ್ಥಳ: ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ಅವರ ನಿಧನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದಿಂದ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಪ್ರೊ ಸೋಮೇಶ್ವರರು ಮೃದು ಸ್ವಭಾವಿ, ಸಹೃದಯಿಯಾಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಯಕ್ಷಗಾನ ಮೇಳಕ್ಕೆ ಪುರಾಣ, ಐತಿಹಾಸಿಕ ಸೇರಿದಂತೆ 11 ಪ್ರಸಂಗಗಳನ್ನು ಬರೆದುಕೊಟ್ಟಿದ್ದರು. ಅವುಗಳ ಯಶಸ್ವಿ ಪ್ರಯೋಗಗಳು ನಡೆಯುತ್ತಿದ್ದವು. ತುಳುವಿನಲ್ಲಿ ಬರೆದ ಅವರ ಅನೇಕ ಹಾಡುಗಳು ಪ್ರಸಿದ್ಧವಾಗಿದ್ದವು ಎಂದು ಸ್ಮರಿಸಿಕೊಂಡಿದ್ದಾರೆ.
ಅವರು ಕೆಲವು ಹಾಡಿನ ತುಳು ಭಾಷಾಂತರ ಕೂಡ ಮಾಡಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ತಜ್ಞ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿ ಮೇರು ಸಾಹಿತಿಯಾಗಿದ್ದ ಅವರನ್ನು ಕಳೆದುಕೊಂಡದ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಹೆಗ್ಗಡೆಯವರು ತಿಳಿಸಿದರು.
ಬದುಕಿನ ಪ್ರಯಾಣದ ನಡುವೆ ಅನಂತ ಸಾಧನೆಗೈದು ಜನಪ್ರಿಯರೂ ಬಹುಮಾನ್ಯರೂ ಆಗಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಭಿಮಾನಿಗಳಾಗಿದ್ದು ನಿರಂತರ ಸಂಪರ್ಕದಲ್ಲಿದ್ದವರು. ನಾಡು ಇಂದು ಅತ್ಯಂತ ಹಿರಿಯ ಹಾಗೂ ಮೇಧಾವಿ ಸಾಹಿತಿಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕುವಂತೆ ಭಗವಾನ್ ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ