ಹುಂಡೈ ಶೋರೂಂಗೆ ಬೆಂಕಿ: 3 ಡಿಸ್ಪ್ಲೆ ಕಾರು ಭಸ್ಮ,

Upayuktha
0



ಶಿವಮೊಗ್ಗ: ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್​ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ.  ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ ನೆಲಮಹಡಿಗೂ ಆವರಿಸಿದ್ದು, ಇದರಿಂದ ಶೋ ರೂಂನಲ್ಲಿ ಡಿಸ್ಪ್ಲೇ ಗೆಂದು ಇಟ್ಟಿದ್ದ 6 ಕಾರುಗಳಲ್ಲಿ 3 ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ.



ಸರ್ವೀಸ್​ಗೆ ಎಂದು ಇಟ್ಟಿದ್ದ ಕಾರುಗಳು ಹಾಗೂ ಪಕ್ಕದ ಟಾಟಾ ಶೋ ರೂಂನ ಹೊರಭಾಗದಲ್ಲಿದ್ದ ನಾಲ್ಕರಿಂದ - ಐದು ಕಾರುಗಳು ಸಹ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಭಾಗಶಃ ಹಾನಿಯಾಗಿವೆ. ಅಲ್ಲದೇ ನೆಲ ಮಾಳಿಗೆಯಲ್ಲಿ ಇಟ್ಟಿದ್ದ ಕಾರಿನ ಬಿಡಿ ಭಾಗಗಳು ಸುಟ್ಟು ಭಸ್ಮವಾಗಿವೆ.




ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ: ಶೋ ರೂಂಗೆ ಹೇಗೆ ಬೆಂಕಿ ಬಿತ್ತು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಶೋ ರೂಂನಲ್ಲಿ ಎಷ್ಟು ಕಾರುಗಳು ಹಾಗೂ ಇತರ ನಷ್ಟ ಉಂಟಾಗಿವೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಕಾರು ಶೋ ರೂಂ ಮಾಲೀಕ ರಾಹುಲ್ ಅವರು ವಿದೇಶಿ ಪ್ರವಾಸದಲ್ಲಿದ್ದಾರೆ. ಸ್ಥಳಕ್ಕೆ ಶಿವಮೊಗ್ಗ ನಗರ ಡಿವೈಎಸ್ಪಿ ಸೇರಿದಂತೆ ಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.




ಫೈರ್ ಸೇಫ್ಟಿ ಮಾಡದೇ ಇರುವುದು ನಷ್ಟಕ್ಕೆ ಕಾರಣ: ಶೋ ರೂಂನವರು ನಿಗದಿತ ಪ್ರಮಾಣದಲ್ಲಿ ಆಟೋಮ್ಯಾಟಿಕ್​ ಆಗಿ ನೀರು ಆನ್​ ಆಗುವ ಸೌಲಭ್ಯ ಮಾಡಿಕೊಂಡಿಲ್ಲ. ಶೋ ರೂಂನಲ್ಲಿ ಕೇವಲ ಫೈರ್​ ಸಿಲಿಂಡರ್​ ವ್ಯವಸ್ಥೆ ಮಾತ್ರ ಇತ್ತು. ಕಾರು ಶೋ ರೂಂನಲ್ಲಿ ಫೈರ್​ ಸೇಫ್ಟಿ ಮಾಡದೇ ಇರುವುದು ಇಷ್ಟೊಂದು ನಷ್ಟಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.



ಗುಂಪು ಚದುರಿಸಲು ಪೊಲೀಸರ ಪರದಾಟ:

ಬೆಂಕಿ ಬಿದ್ದ ಸುದ್ದಿ ತಿಳಿಯುತ್ತಲೇ ಜನರು ತಂಡೋಪ ತಂಡವಾಗಿ ಆಗಮಿಸಿದ್ದು, ಶಂಕರ ಮಠ ರಸ್ತೆಯಲ್ಲಿ ಜನ ಸಾಗರವೇ ಸೇರಿತ್ತು. ಜನರನ್ನು ಚದುರಿಸಲು ಹರ ಸಾಹಸ ಪಡುವಂತಾಗಿತ್ತು.


ಘಟನೆ ಬಗ್ಗೆ ಮಾತನಾಡಿದ ಶೋ ರೂಂ ಸೇಲ್ಸ್​ ಮ್ಯಾನೇಜರ್​ ಮಣಿಕಂಠ, "ನಮಗೆ ಸುಮಾರು ರಾತ್ರಿ 8 ಗಂಟೆಗೆ ಶೋ ರೂಂಗೆ ಬೆಂಕಿ ಬಿದ್ದಿರುವ ಮಾಹಿತಿ ಬಂತು. ತಕ್ಷಣ ನಾವೆಲ್ಲಾ ಶೋರೂಂ ಬಳಿ ಬಂದೆವು.‌ ಹೇಗೆ ಬೆಂಕಿ ಬಿತ್ತು ಎಂದು ನಮಗಿನ್ನೂ ತಿಳಿದು ಬಂದಿಲ್ಲ. ಸದ್ಯ ಬೆಂಕಿ ನಂದಿದೆ. ಶೋ ರೂಂನಲ್ಲಿ ಡಿಸ್ಪ್ಲೇಗೆ ಇಟ್ಟಿದ್ದ 6 ಕಾರುಗಳಲ್ಲಿ 3 ಕಾರು ಸುಟ್ಟು ಹೋಗಿವೆ. ಇನ್ನೂ ಕಾರಿನ ಬಿಡಿ ಭಾಗಗಳು ಸುಟ್ಟಿವೆ. ಪಾರ್ಕಿಂಗ್​ನಲ್ಲಿದ್ದ ಗ್ರಾಹಕರ ಕಾರುಗಳು ಸೇಫ್ ಆಗಿವೆ. ಗ್ರಾಹಕರು ಭಯಪಡುವ ಅಗತ್ಯವಿಲ್ಲ. ನಾವು ಕಾನೂನಿನ ಪ್ರಕಾರ ಫೈರ್​ ಸೇಫ್ಟಿ ಎಲ್ಲವನ್ನೂ ಮಾಡಿಕೊಂಡಿದ್ದೆವು. ಆದರೂ ಹೀಗೆ ಬೆಂಕಿ ಬಿದ್ದಿದೆ. ಆದರೆ, ಅಗ್ನಿಶಾಮಕ ದಳದವರು ನಮಗೆ ಸರಿಯಾಗಿ ಸ್ಪಂದಿಸಿಲ್ಲ" ಎಂದು ಆರೋಪಿಸಿದರು.



ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದಿದ್ದೇವೆ - ಅಗ್ನಿಶಾಮಕದಳ: ಬೆಂಕಿ ನಂದಿಸಿದ ನಂತರ ಮಾತನಾಡಿದ ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಜಿ.ಮಹಾಲಿಂಗಪ್ಪ, "ಸುಮಾರು 10 ಗಂಟೆಗೆ ನಮಗೆ ವಿಷಯ ತಿಳಿಯಿತು.‌ ತಕ್ಷಣ ನಮ್ಮ ಒಂದು ವಾಹನವನ್ನು ಕಳುಹಿಸಿಕೊಟ್ಡಿದ್ದೆವು. ಬೆಂಕಿ ಪ್ರಮಾಣ ಹೆಚ್ಚಾದ ಕಾರಣ ಇನ್ನೊಂದು ವಾಹನವನ್ನು ಕಳುಹಿಸಿಕೊಡಲಾಯಿತು. ಬಳಿಕ 16 ಸಾವಿರ ಲೀಟರ್ ವಾಹನವನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ತರಲಾಯಿತು. ನಂತರ ಬೆಂಕಿ ಹತೋಟಿಗೆ ಬಂದಿತು. ಆದರೆ, ಅಂಡರ್​ಗ್ರೌಂಡ್​ನಲ್ಲಿ ಆಯಿಲ್, ಪೆಟ್ರೋಲ್ ಇದ್ದ ಕಾರಣ ಬೆಂಕಿ ಕಂಟ್ರೋಲ್​ಗೆ ಬರಲಿಲ್ಲ. ನಂತರ ಮತ್ತೊಂದು ವಾಹನ ತಂದು ಬೆಂಕಿಯನ್ನು ನಂದಿಸಲಾಯಿತು. ಮುಖ್ಯವಾಗಿ ಶೋ ರೂಂನವರು ಬೆಂಕಿ ಶಮನದ ಕುರಿತು ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಇದರಿಂದಲೇ ಬೆಂಕಿ ಹೆಚ್ಚಿನ ಪ್ರಮಾಣದಲ್ಲಿ ಹರಡಲು ಕಾರಣವಾಯಿತು. ಸುಮಾರು ನಾಲ್ಕೈದು ಕಾರು ಕಾರುಗಳು ಸುಟ್ಟು ಹೋಗಿವೆ. ಅದೇ ರೀತಿ ಪಕ್ಕದ ಟಾಟಾ ಶೋ ರೂಂನ ನಾಲ್ಕೈದು ಕಾರುಗಳು ಬೆಂಕಿಗೆ ಭಾಗಶಃ ಸುಟ್ಟು ಹೋಗಿವೆ. ಬೆಂಕಿ ಬಿದ್ದ ಕಾರಣ ಹಾಗೂ ಏನೇನು ನಷ್ಟ ಉಂಟಾಗಿವೆ ಎಂಬುದು ತನಿಖೆಯಿಂದ ತಿಳಿದು ಬರಬೇಕಷ್ಟೆ" ಎಂದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top