ಧರ್ಮಸ್ಥಳದ ಧರ್ಮಾಧಿಕಾರಿಗಳು ಪಾದಯಾತ್ರಿಗಳನ್ನು ಭೇಟಿ ಮಾಡಿದರು.
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶುಕ್ರವಾರ ನಡೆಯುವ ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಸುಮಾರು ಮೂವತ್ತು ಸಾವಿರ ಪಾದಯಾತ್ರಿಗಳು ಬರುವುದಾಗಿ ಪೂರ್ವಭಾವಿಯಾಗಿ ತಿಳಿಸಿದ್ದು ಹದಿನೈದು ಸಾವಿರ ಪಾದಯಾತ್ರಿಗಳು ಗುರುವಾರ ಧರ್ಮಸ್ಥಳ ತಲುಪಿದ್ದಾರೆ.
ಹತ್ತು ಸಾವಿರ ಮಂದಿ ಗುರುವಾರ ಸಂಜೆ ಉಜಿರೆ ತಲುಪಿದ್ದು ಇಲ್ಲಿನ ಎಸ್.ಡಿ.ಎಂ. ಶಿಕ್ಷಣ ಸಂಸ್ಥಗಳಲ್ಲಿ ಅವರಿಗೆ ವಸತಿ ಸೌಲಭ್ಯ, ಶೌಚಾಲಯ, ಕುಡಿಯುವನೀರು, ಅಡುಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರು, ಮೈಸೂರು, ಶಿವಮೊಗ್ಗ ಮೊದಲಾದ ಕಡೆಯ ಪಾದಯಾತ್ರಿಗಳು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಹೆಸರಿನಲ್ಲಿ ಸಂಘ ರಚಿಸಿದ್ದು ಪ್ರತಿವರ್ಷ ಸಂಘದ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಬರುತ್ತಾರೆ.
ಹಾಸನದ ಶಶಿಕಿರಣ್ ನೇತೃತ್ವದಲ್ಲಿ 285 ಪಾದಯಾತ್ರಿಗಳು ಉಜಿರೆ ತಲುಪಿದ್ದು ಒಂದು ಗಂಟೆ ಕಾಲ ಶ್ರದ್ಧಾ-ಭಕ್ತಿಯಿಂದ ಭಜನೆ ನಡೆಸಿದರು. ಭಾವಗೀತೆ, ಭಕ್ತಿಗೀತೆಗಳನ್ನು ಸಾಮೂಹಿಕವಾಗಿ ಎಲ್ಲರೂ ಸುಶ್ರಾವ್ಯವಾಗಿ ಹಾಡಿದರು. ಸ್ಥಳೀಯ ನಾಗರಿಕರು ಅವರಿಗೆ ಪಾನೀಯ, ಊಟ, ತಿಂಡಿ ವ್ಯವಸ್ಥೆಯನ್ನು ಉಚಿತವಾಗಿ ಮಾಡಿದರು.
ಧರ್ಮಸ್ಥಳದಲ್ಲಿ ಇಂದು ಜಾಗರಣೆ: ಶುಕ್ರವಾರ ಸಂಜೆ 6 ಗಂಟೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣವನ್ನು ಉದ್ಘಾಟಿಸುವರು. ಉಪವಾಸ ಮತ್ತು ವ್ರತ, ನಿಯಮಗಳೊಂದಿಗೆ ಇಡೀ ರಾತ್ರಿ ಶಿವಪಂಚಾಕ್ಷರಿ ಪಠಣ, ಭಜನೆ, ದೇವರ ನಾಮಸ್ಮರಣೆ ನಡೆಯುತ್ತದೆ. ಶನಿವಾರ ಮುಂಜಾನೆ ರಥೋತ್ಸವ ನಡೆಯುತ್ತದೆ.
ಶಿವರಾತ್ರಿ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ. ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಲೇಜ್ ವಿದ್ಯಾರ್ಥಿನಿ ಕಲ್ಪನಾ ಮಾತನಾಡಿ, ಪಾದಯಾತ್ರೆಯಿಂದ ನವಚೈತನ್ಯ ಮೂಡಿಬಂದಿದೆ. ಮುಂದೆ ಪ್ರತಿವರ್ಷವೂ ಶಿವರಾತ್ರಿಗೆ ಪಾದಯಾತ್ರೆಯಲ್ಲಿ ಬರುವುದಾಗಿ ತಿಳಿಸಿದ್ದಾರೆ.
ಹಾಸನದ 60 ವರ್ಷ ಪ್ರಾಯದ ವ್ಯಾಪಾರಿ ಗೋಪಾಲಗೌಡ ಕಳೆದ 5 ವರ್ಷಗಳಿಂದ ತಾನು ಪ್ರತಿವರ್ಷ ಪಾದಯಾತ್ರೆಯಲ್ಲಿ ಬರುತ್ತಿದ್ದು ತನ್ನ ಆರೋಗ್ಯ ಸುಧಾರಿಸಿದೆ. ಮಾನಸಿಕ ಶಾಂತಿ, ನೆಮ್ಮದಿ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ