ಮಂಗಳೂರು: ಬದುಕು ಕಟ್ಟಿಕೊಳ್ಳಲು ಯಾರನ್ನು ಕಾಯಬೇಕಾಗಿಲ್ಲ. ವಿದ್ಯಾಭ್ಯಾಸ ಮುಗಿಸಿದ ನಂತರ ಇರುವ ಅವಕಾಶ ಹಾಗೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದುರಿಸುತ್ತಿರುವ ಸಮಸ್ಯೆ ಹಾಗೂ ಪರಿಹಾರದ ಕುರಿತು ಕೊಡಗು ಜಿಲ್ಲಾ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಮುಖ್ಯ ವ್ಯವಸ್ಥಾಪಕ ಆರ್. ಕೆ. ಬಾಲಚಂದ್ರ ಅವರು ತಿಳಿಸಿದರು.
ನಗರದ ಇತಿಹಾಸ ವಿಭಾಗ, ಇತಿಹಾಸ ಸ್ನಾತಕೋತರ ಅಧ್ಯಯನ ವಿಭಾಗ, ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಗೂ ಪ್ರಶ್ನಿಸುವ ಹಕ್ಕಿದೆ ಎಂಬುದನ್ನು ಮೊದಲು ಅರಿಯಬೇಕು. ಬಹುತೇಕ ವಿದ್ಯಾರ್ಥಿಗಳು ಹದಿನೇಳು ವರ್ಷಗಳ ಕಾಲ ನಿರಂತರ ಶಿಕ್ಷಣ ಪಡೆದುಕೊಂಡ ನಂತರ ಉದ್ಯೋಗ ಪಡೆಯುವ ಸಂದರ್ಭದಲ್ಲಿ ಎಡವುತ್ತಾರೆ. ಹಾಗಾಗಿ ಆ ಕುರಿತು ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಸಲಹೆ ನೀಡಿದರು.
ದೇಶದಲ್ಲಿರುವ 51 ಸಾವಿರ ಕಾಲೇಜುಗಳಲ್ಲಿ 3.20 ಕೋಟಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಅವರುಗಳಲ್ಲಿ ಕೇವಲ 80 ಲಕ್ಷ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸುತ್ತಾರೆ. ಅವರುಗಳಲ್ಲಿ 8 ಲಕ್ಷ ಜನರು ಮಾತ್ರವೇ ಉದ್ಯೋಗ ಪಡೆಯುವಲ್ಲಿ ಶಕ್ತರಾಗಿರುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನದ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡುವ ಅವಕಾಶ ಅವರ ಜೀವನ ಕಟ್ಟಿಕೊಡಲು ಪುಟ್ಟ ಹಣತೆ ಇಟ್ಟಂತೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಅಗತ್ಯವಿರುವುದಿಲ್ಲ. ಬದಲಾಗಿ, ಶ್ರದ್ಧೆಯಿಂದ ಅಭ್ಯಾಸ ಮಾಡುವ ಜೊತೆಗೆ ಸಮಯ ನಿರ್ವಹಣೆ ಮಾಡುವ ಕಲೆ ತಿಳಿದಿರಬೇಕು. ಬ್ಯಾಂಕಿಂಗ್ ಪರೀಕ್ಷೆಗಳಿಗೆ ಸಮಯದ ಮಿತಿ ಬಹಳ ಕಡಿಮೆ ಇರುತ್ತದೆ. ಆದ್ದರಿಂದ ಬ್ಯಾಂಕಿಂಗ್ ಪರೀಕ್ಷೆಗಳನ್ನು ತೆಗೆದುಕೊಂಡ ವೇಳೆ ಕಠಿಣ ಪರಿಶ್ರಮದ ಜೊತೆಗೆ ನಿರಂತರ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಹೆತ್ತವರಾಗಲಿ, ಶಿಕ್ಷಕರಾಗಲಿ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿರಲಿಲ್ಲ. ಆದರೆ ಜಗತ್ತಿನಲ್ಲಿ ಪೈಪೋಟಿ ಹೆಚ್ಚಾಗಿದೆ. ಲಭ್ಯವಿರುವ ಅವಕಾಶ ಹಾಗೂ ಸೂಕ್ತ ಮಾಹಿತಿಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಐಕ್ಯೂಎಸಿ ಸಂಯೋಜಕ ಡಾ. ಸಿದ್ಧರಾಜು ಎಂ. ಎನ್., ಸ್ನಾತಕೋತ್ತರ ಇತಿಹಾಸ ವಿಭಾಗದ ಸಂಯೋಜಕ ಪ್ರೊ. ಗಣಪತಿ ಗೌಡ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಜಯರಾಜ್ ಎನ್. ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ