ಜಿ.ಪಂ ಸಿ.ಇ.ಓ ಪ್ರತೀಕ್ ಬಾಯಲ್ ಕರೆ
ಉಡುಪಿ: ಮತ ಚಲಾಯಿಸುವುದು ಎಲ್ಲಾ ಅರ್ಹ ಮತದಾರರ ಸಂವಿಧಾನಾತ್ಮಕ ಹಕ್ಕಾಗಿದ್ದು, ಮತ ಚಲಾಯಿಸಿ, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.
ಅವರು ಶುಕ್ರವಾರ ನಗರದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಆಸರೆ ವಿಶೇಷ ಶಾಲೆ ಮಣಿಪಾಲ ಇವರ ಸಹಯೋಗದಲ್ಲಿ ನಡೆದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಎಲ್ಲಾ ಮತದಾರರು ಏಪ್ರಿಲ್ 26 ರ ಉಡುಪಿ-ಚಿಕ್ಕಮಗಳೂರು ಮತ್ತು ಮೇ 7ರ ಶಿವಮೊಗ್ಗ ಲೋಕಸಭಾ ಚುನಾವಣೆಯಂದು ತಪ್ಪದೇ ಮತ ಚಲಾಯಿಸಬೇಕು. ಹಿರಿಯ ನಾಗರಿಕರು ಮತ್ತು ವಿಕಲಚೇತನರು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭವಾಗಿದ್ದು, ಇವರುಗಳಿಗೆ ಸುಗಮ ಮತದಾನಕ್ಕಾಗಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು..
ಯೋಜನಾ ಸಹಾಯಕ ಶಿವಾಜಿ ಎ.ಕೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಭಟ್ ಇವರು ಮತದಾರರ ಜಾಗೃತಿ ಅಭಿಯಾನವನ್ನು ಯಕ್ಷಗಾನ ಪ್ರಸಂಗದ ಮೂಲಕ ಚುನಾವಣೆಯ ಪ್ರಾಮುಖ್ಯತೆ, ವಿಕಲಚೇತನ ಮತದಾರರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಮತಗಟ್ಟೆಗಳಲ್ಲಿ ಒದಗಿಸಲಾಗುವ ಮೂಲಭೂತ ಸೌಲಭ್ಯಗಳು ಹಾಗೂ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಲು ಸಾಧ್ಯವಾಗದ ಮತದಾರರಿಗೆ ಅಂಚೆ ಮತದಾನದ ಮೂಲಕ ಮತದಾನದ ಸೌಲಭ್ಯ ಒದಗಿಸಿರುವ ಬಗ್ಗೆ ಮಾಹಿತಿ ನೀಡಿದರು.
ಕುಂದಾಪುರ ವಾಗ್ಜ್ಯೋತಿ ಶ್ರವಣದೋಷವುಳ್ಳ ವಿಶೇಷ ಶಾಲೆಯ ವಿಶೇಷ ಶಿಕ್ಷಕಿ ಪ್ರಮೀಳ ಸಂಜ್ಞಾ ಭಾಷೆಯ ಮೂಲಕ ಶ್ರವಣದೋಷವುಳ್ಳ ವಿಕಲಚೇತನ ಮತದಾರರಿಗೆ ಕಾರ್ಯಕ್ರಮದ ಕುರಿತು ಅನುವಾದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅನುರಾಧ, ರೊ.ರೇಣು ಜೈರಾಮ್, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಡಿ.ಡಿ.ಆರ್.ಸಿ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಆಸರೆ ವಿಶೇಷ ಶಾಲೆಯ ವಿಶೇಷಚೇತನ ಮಕ್ಕಳು, ಕೆ.ಎಂ.ಸಿ ಆಸ್ಪತ್ರೆಯ ಸಿಬ್ಬಂದಿಗಳು, ಆಸ್ಪತ್ರೆಯು ಹೊರರೋಗಿಗಳು ಮತ್ತು ಪೋಷಕರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಮಾಹಿತಿ/ಸಲಹಾ ಕೇಂದ್ರ ಮತ್ತು ಡಿ.ಡಿ.ಆರ್.ಸಿಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕೆ.ಎಂ.ಸಿ ಮಾರ್ಕೆಟಿಂಗ್ ಮ್ಯಾನೇಜರ್ ಮೊಹನ್ ಶೆಟ್ಟಿ ಸ್ವಾಗತಿಸಿ, ಆಸರೆ ವಿಶೇಷ ಶಾಲೆಯ ಮುಖ್ಯ ಶಿಕ್ಷಕ ರಮೇಶ್ ನಾಯ್ಕ್ ನಿರೂಪಿಸಿ, ಶಾಲೆಯ ಮುಖ್ಯಸ್ಥ ಜೈವಿಠಲ್ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ