ಧರ್ಮಸ್ಥಳದಲ್ಲಿ ಹತ್ತನೆ ವಿಶ್ವಯೋಗ ದಿನ ಆಚರಣೆ

Upayuktha
0

ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ




*ಯೋಗಪಟು ಮೈಸೂರಿನ ಕುಮಾರಿ ಖುಷಿ, ಎಚ್. ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

*ಕುಮಾರಿ ಖುಷಿ, ಎಚ್. ಅವರಿಂದ ಯೋಗ ಪ್ರಾತ್ಯಕ್ಷಿಕೆ ಕಣ್ಮನ ಸೆಳೆಯಿತು.


ಉಜಿರೆ: ದೈಹಿಕ ಹಾಗೂ ಮಾನಸಿಕ ಸಮತೋಲನದೊಂದಿಗೆ ಆರೋಗ್ಯಭಾಗ್ಯ ಕಾಪಾಡಲು ಎಲ್ಲರೂ ನಿತ್ಯವೂ ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸಕ್ಕೆ ವಯಸ್ಸಿನ ಮಿತಿ ಇರುವುದಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ  ಹತ್ತನೆ ವಿಶ್ವ ಯೋಗ ದಿನ ಆಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಕ್ಕೆ ವಿದೇಶಗಳಿಂದ ಔಷಧಿ ಆಮದು ಮಾಡುತ್ತೇವೆ. ವಿದೇಶಗಳಿಗೆ  ಭಾರತದಿಂದ ಔಷಧಿ ರಹಿತ ಯೋಗವನ್ನು ರಫ್ತು ಮಾಡಲಾಗುತ್ತದೆ. ಪ್ರಧಾನಿ ನರೇಂದ್ರಮೋದಿಯವರ ನೇತೃತ್ವದಲ್ಲಿ ಇಂದು ಜಾಗತಿಕಮಟ್ಟದಲ್ಲಿ ಯೋಗದ ಮಹತ್ವ ಪ್ರಚಾರವಾಗಿದ್ದು ಎಲ್ಲರೂ ಆಸಕ್ತಿ ಮತ್ತು ಕುತೂಹಲದಿಂದ ಯೋಗಾಭ್ಯಾಸ ಮಾಡುತ್ತಿದ್ದಾರೆ. ಯೋಗ ಮತ್ತು ಆಧ್ಯಾತ್ಮದ ತಾತ್ವಿಕ ನೆಲೆಯಲ್ಲಿ ಭಾರತ ವಿಶ್ವಗುರುವಿನ ಮಾನ್ಯತೆ ಹೊಂದಿದೆ. ಧರ್ಮಸ್ಥಳದ ಶಾಂತಿವನಟ್ರಸ್ಟ್ ನೇತೃತ್ವದಲ್ಲಿ  ಧರ್ಮಸ್ಥಳ, ಮಣಿಪಾಲದ ಬಳಿ ಪರೀಕಾ ಮತ್ತು ಬೆಂಗಳೂರಿನ ನೆಲಮಂಗಲದಲ್ಲಿ ಪ್ರಕೃತಿಚಿಕಿತ್ಸಾ ಆಸ್ಪತ್ರೆ ಪ್ರಾರಂಭಿಸಿ ಆರೋಗ್ಯಭಾಗ್ಯ ರಕ್ಷಣೆಗೆ ಪ್ರೋತ್ಸಾಹ, ಪ್ರೇರಣೆ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದರು.


ಮೈಸೂರಿನ ಕುಮಾರಿ ಖುಷಿ ಯೋಗ ಪ್ರಚಾರದಲ್ಲಿ ಮಾಡಿದ ಸಾಧನೆಗೆ ಹೆಗ್ಗಡೆಯವರು ಅಭಿನಂದಿಸಿದರು.


ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ. ಜೋಸ್ ಎಬ್‌ನಜೀರ್ ಮತ್ತು ತುಮಕೂರಿನ ಸಿದ್ದಾರ್ಥ ಉನ್ನತ ಶಿಕ್ಷಣ ಅಕಾಡೆಮಿ ಉಪಕುಲಪತಿ ಡಾ. ಕೆ. ಬಿ. ಲಿಂಗೇಗೌಡ ಶುಭಾಶಂಸನೆ ಮಾಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗವಿಜ್ಞಾನಕ್ಕೆ ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು.


ಯೋಗಪ್ರಚಾರದಲ್ಲಿ ವಿಶೇಷ ಸೇವೆ-ಸಾಧನೆ ಮಾಡಿದ ಮೈಸೂರಿನ ಕುಮಾರಿ ಖುಷಿ, ಎಚ್. ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕುಮಾರಿ ಖುಷಿ, ಎಚ್. ಯೋಗ ಪ್ರಾತ್ಯಕ್ಷಿಕೆ ನೀಡಿದರು. ಯೋಗ ಸಾಧಕರಾದ ಅಶ್ವತ್ ಹೆಗಡೆ ಮತ್ತು ಡಾ. ಅಚ್ಯುತ ಈಶ್ವರನ್ ಅವರನ್ನು ಗೌರವಿಸಲಾಯಿತು.


ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭ ಹಾರೈಸಿದರು. ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಸುಧಾಕರ ಕೊಟ್ಟಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ, ಡಾ. ಶಶಿಕಾಂತ್ ಜೈನ್ ಮತ್ತು ಡಾ. ಸುಜಾತ ಉಪಸ್ಥಿತರಿದ್ದರು.


ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಧನ್ಯವಾದವಿತ್ತರು.


ಕುಮಾರಿ ಅನನ್ಯಾ ಜೈನ್ ಮತ್ತು ಡಾ. ಕೃತಿಕಾ ರಾಮಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top