ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಭೆ ನಡೆಸಲಾಯಿತು. ಉಡುಪಿ ಲೋಕಾಯುಕ್ತ ಪೋಲಿಸ್ ನಿರೀಕ್ಷಕರಾದ ಶ್ರೀ ಮಂಜುನಾಥ್ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣದಲ್ಲಿ ಇಂದಿನ ತಂತ್ರಜ್ಞಾನ ಯುಗದಲ್ಲಿ ಸೈಬರ್ ಅಪರಾಧಗಳು ಗಣನೀಯವಾಗಿ ಹೆಚ್ಚುತ್ತಿದ್ದು ಯುವ ಜನತೆಯಿಂದ ವೃದ್ಧರ ತನಕ ಎಲ್ಲರೂ ಎಚ್ಚರಿಕೆ ಜೀವನ ನಡೆಸುವಂತಾಗಿದೆ. ವಿದ್ಯಾವಂತರೇ ಹೆಚ್ಚಾಗಿ ಸೈಬರ್ ಅಪರಾಧಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ.
ಇದರ ಜೊತೆಗೆ ಇಂದಿನ ಯುವ ಜನತೆಯಲ್ಲಿ ಮಾದಕ ದ್ರವ್ಯ ವ್ಯಸನವೂ ಕಂಡಬರುತ್ತಿದ್ದು ಶಿಕ್ಷಣ ಇಲಾಖೆಯ ಜೊತೆ ಪಾಲಕರು-ಶಿಕ್ಷಕರು ಒಟ್ಟಾಗಿ ಈ ಕುರಿತು ಜಾಗೃತಿ ಮೂಡಿಸಬೇಕಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸುವಾಗಲೂ ವಿದ್ಯಾರ್ಥಿಗಳು ಸಾಕಷ್ಟು ಎಚ್ಚರಿಕೆಯಿಂದ ಇರಬೇಕೆಂದರು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ತಂತ್ರಜ್ಞಾನದಿಂದ ಲಾಭ-ನಷ್ಟಗಳೆರಡೂ ಇದ್ದು ನಮ್ಮ ಪ್ರಯೋಜನಕ್ಕಷ್ಟೇ ಬಳಸಿಕೊಳ್ಳಬೇಕು.
ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರವನ್ನು ಸವಿವರವಾಗಿ ತಿಳಿಸಿದರು. ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷರಾದ ಭಾರತಿ ಹೆಚ್.ಎಸ್. ಶುಭ ಹಾರೈಸಿದರೆ, ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಸುಜಾತ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಾಧಾಕೃಷ್ಣ, ಡಾ. ರಾಘವ ನಾಯ್ಕ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
2024-25ನೇ ಸಾಲಿಗೆ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಭಾರತಿ ಕೆ. ಕಾಮತ್, ಉಪಾಧ್ಯಕ್ಷರಾಗಿ ರಾಧಾಕೃಷ್ಣ ಪೈ, ಕಾರ್ಯದರ್ಶಿಯಾಗಿ ಪ್ರಮೀಳ, ಜಂಟಿಕಾರ್ಯದರ್ಶಿಯಾಗಿ ಕೃಷ್ಣಯ್ಯ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿಕ್ಷಕ ರಕ್ಷಕ ಸಂಘದ ಪದವಿ ವಿಭಾಗ ಸಂಚಾಲಕರಾದ ಉಮೇಶ್ ಪೈ ಅತಿಥಿಗಳನ್ನು ಸ್ವಾಗತಿಸಿದರೆ, ಸ್ನಾತಕೋತ್ತರ ವಿಭಾಗ ಸಂಚಾಲಕರಾದ ತಿಮ್ಮಣ್ಣ ಜಿ. ಭಟ್ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


