ಸುಲಿಗೆ ಸರ್ಕಾರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನತೆಗೆ ಬರೆ ಎಳೆದ ಕಾಂಗ್ರೆಸ್ ಸರ್ಕಾರಕ್ಕೆ ಸುನಿಲ್ ಕುಮಾರ್ ತರಾಟೆ

Upayuktha
0


ಮಂಗಳೂರು: ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.



ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರ್ಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ 13 ಸಾವಿರ ಕೋಟಿ ಕೊರತೆ ಸೃಷ್ಟಿಯಾಗಿರುವುದರಿಂದ ರಾಜ್ಯ ಸರ್ಕಾರ ಧೂಮಕೇತುವಿನ ರೀತಿ ಜನಸಾಮಾನ್ಯರ ಮೇಲೆ ಎರಗಿದೆ ಎಂದು ಅವರು ಹೇಳಿದರು.

 


ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧ ಇಂಧನ ದರ ಇಳಿಕೆಗಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಆದರೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಸೆಸ್ ಇಳಿಕೆ ಮಾಡಿದರೂ ಕರ್ನಾಟಕ ಸರ್ಕಾರ ಮಾತ್ರ ತೆಪ್ಪಗಿತ್ತು. ಬಜೆಟ್‌ಗೆ ಮುನ್ನವೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.


ವೈದ್ಯಶಿಕ್ಷಣ ಸೇರಿದಂತೆ ವೃತ್ತಿ ಶಿಕ್ಷಣ ಶುಲ್ಕವನ್ನು ಶೇ.10ರಷ್ಟು ಏರಿಕೆ ಮಾಡಿದ್ದ ಸರ್ಕಾರ ಪೆಟ್ರೋಲಿಗೆ ಬೆಂಕಿ ಹಚ್ಚಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದು ಅನಿವಾರ್ಯ. ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಸಿರಾಡುವುದಕ್ಕೂ ತೆರಿಗೆ ಹಾಕುವುದು ಗ್ಯಾರಂಟಿ ಎಂದು ಸುನಿಲ್ ಕುಮಾರ್ ಟೀಕಿಸಿದರು.


Post a Comment

0 Comments
Post a Comment (0)
To Top