ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ: ಬಳ್ಳಾರಿ ಮೇಯರ್

Upayuktha
0




ಬಳ್ಳಾರಿ: 
ದೇಹದ ಚರ್ಮದ ಮೇಲೆ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖದಲ್ಲಿ ಗಂಟುಗಳು, ಕಿವಿಯ ಮೇಲೆ ಗಂಟುಗಳು ಕಂಡು ಬಂದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. ತಪ್ಪದೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 38ನೇ ವಾರ್ಡ್‌ನ  ಕಾರ್ಕನ ಮಸೀದಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಹೊಸದಾಗಿ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪತ್ತೆ ಹಚ್ಚಲು ಜು.29 ರಿಂದ ಆ.14 ರ ವರೆಗೆ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಮನೆ ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಕೋರಿದರು.


ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್  ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರುಷ ಮತ್ತು ಮಹಿಳಾ ಸ್ವಯಂಸೇವಕರು ಮನೆ-ಮನೆ ಭೇಟಿ ಮಾಡಿ ಕುಷ್ಠರೋಗದ ಬಗ್ಗೆ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.


ಮನೆಯಲ್ಲಿರುವ 2 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ತಪಾಸಣೆ ಕೈಗೊಂಡು ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ರೆಫರಲ್  ಫಾರಂ ನೀಡಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಒಂದು ವೇಳೆ ಅಗತ್ಯವೆನಿಸಿದರೆ ಜಿಲ್ಲಾ ಆಸ್ಪತ್ರೆ ಹಾಗು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ತಜ್ಞ ವೈದ್ಯರುಗಳ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಕಳುಹಿಸಲಾಗುವುದು. ಖಚಿತಪಟ್ಟಲ್ಲಿ ರೋಗಿಯ ಮೈಮೇಲೆ ಚಿಹ್ನೆಗಳು ಅಥವಾ ವೈದ್ಯರ ನಿರ್ಧರಿಸಿದಂತೆ 6 ತಿಂಗಳಿನಿಂದ 1 ವರ್ಷದ ಚಿಕಿತ್ಸೆ ನೀಡಲಾಗುವುದು. ಚಿಕಿತ್ಸೆ ಪೂರ್ಣಗೊಂಡಲ್ಲಿ ರೋಗ ಸಂಪೂರ್ಣ ಗುಣವಾಗುವುದು ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ್, ವೈಧ್ಯಾಧಿಕಾರಿ ಡಾ.ಸುಧಾರಾಣಿ, ಡಿಎಫ್‌ಐಟಿ ಸಂಯೋಜಕ ಸುಧಾಕರ್, ಕುಷ್ಠರೋಗ ವಿಭಾಗದ ಸುಮನ್, ಮಾನಪ್ಪ, ಎನ್.ಪಂಪಯ್ಯಸ್ವಾಮಿ, ಬಳ್ಳಾರಿ ತಾಲ್ಲೂಕು ಮೇಲ್ವಿಚಾರಕ ಮುಸ್ತಾಕ್ ಅಹಮದ್ ಸೇರಿದಂತೆ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top