ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸಮಾಲೋಚನಾ ಕಾರ್ಯಾಗಾರ

Upayuktha
0


ಮೂಡುಬಿದಿರೆ:
ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯ ವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತ ಡಾ. ಎಂ ಮೋಹನ ಆಳ್ವ ಹೇಳಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಬುಧವಾರ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರುಮಾತನಾಡಿದರು.


ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲವಾಗಿ ಮೂಡುವ ಅವಶ್ಯಕತೆ ಇದೆ. ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ರೀತಿಯ ಕೊರತೆ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಅಲ್ಲಿನ ಸಿಬ್ಬಂದಿಯದ್ದು. ಇದರಿಂದ ನಮ್ಮ ಜಿಲ್ಲೆಯು ದೇಶಕ್ಕೆ ಮಾದರಿಯಾಗಲಿದೆ ಎಂದರು.


ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕ ಸಿ. ಡಿ. ಜಯಣ್ಣ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಕಾಲೇಜು ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ನಾನು ಸ್ಕೌಟ್ಸ್ ಮತ್ತು ಗೈಡ್ಸ್ ಅನ್ನು ಪಸರಿಸುವ ಧ್ಯೇಯದ ಸಭೆಯನ್ನು ಆಯೋಜಿಸುತ್ತೇನೆ ಎಂದು ಭರವಸೆ ನೀಡಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ. ಜಿ ಆರ್ ಸಿಂಧ್ಯ ಮಾತನಾಡಿ, ರಾಜ್ಯದ ಶಿಕ್ಷಣ ಕ್ಷೇತ್ರದ ಸಿಬ್ಬಂದಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡುವಲ್ಲಿ ಸಹಕರಿಯಾಗಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಯಾವುದೇ ರೀತಿಯ ಸಂಭಾವನೆ ನೀಡದೆ ಇದ್ದರೂ, ನಮ್ಮ ಸಿಬ್ಬಂದಿ ಯಾವುದೇ ಅಪೇಕ್ಷೆ ಇಲ್ಲದೆ ತಮ್ಮ ಅಮೂಲ್ಯ ಸಮಯವನ್ನು ಸಮರ್ಪಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.


ದೇಶದಲ್ಲೇ ಸ್ಥಳೀಯ ಸಂಸ್ಥೆಯೊಂದಕ್ಕೆ ಇಷ್ಟು ಸುಲಲಿತವಾದ ಕಾರ್ಯಾಲಯ ಇರುವುದು ಮೂಡುಬಿದಿರೆಯಲ್ಲಿ ಮಾತ್ರ, ಇದು ಡಾ ಎಂ ಮೋಹನ ಆಳ್ವರ ಮಾರ್ಗದರ್ಶನದಿಂದ ಸಾಧ್ಯವಾಗಿದೆ. ಎಲ್ಲಾ ಪಕ್ಷ, ಜಾತಿ, ಧರ್ಮಗಳೂ ಪ್ರೀತಿಸುವ ವ್ಯಕ್ತಿ ಡಾ ಎಂ ಮೋಹನ ಆಳ್ವ ಅವರಿಂದ ನಮಗೆ ಹೆಚ್ಚಿನ ಶಕ್ತಿ ಬಂದಿದೆ ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ 2024-25 ನೇ ಸಾಲಿನಲ್ಲಿ ನಡೆಯಲಿರುವ ಚಟುವಟಿಕೆಗಳ ಪುಸ್ತಕ ಬಿಡುಗಡೆ ಮಾಡಲಾಯಿತು.


ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ. ಎನ್ ತುಂಬೆ ಸ್ವಾಗತಿಸಿ, ರಾಜ್ಯ ಸಂಘಟನಾ ಆಯುಕ್ತ ಎಂ ಪ್ರಭಾಕರ ಭಟ್ ವಂದಿಸಿ, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ ನಿರೂಪಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ರಂಗಧಾಮಪ್ಪ, ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ರಾಜಲಕ್ಷ್ಮಿ ಕೆ, ಹಿರಿಯ ಉಪನ್ಯಾಸಕ ಪೀತಾಂಬರ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ (ಮೂಡುಬಿದಿರೆ), ರಮೇಶ್ (ಸುಳ್ಯ), ಈಶ್ವರ (ಮಂಗಳೂರು ದಕ್ಷಿಣ)್ರ, ಮಂಜುನಾಥ್ (ಬಂಟ್ವಾಳ), ಡಾ. ದೊಡ್ಡೇ ಗೌಡ (ಮಡಿಕೇರಿ), ಲೋಕೇಶ್ (ಕಾರ್ಕಳ) ಇದ್ದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ., ದಕ್ಷಿಣ ಕನ್ನಡ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಉಪಾಧ್ಯಕ್ಷ ವಸಂತ, ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ಜಿಲ್ಲಾ ಮುಖ್ಯ ಆಯುಕ್ತರಾದ ಬೇಬಿ ಮ್ಯಾಥ್ಯೂ(ಕೊಡಗು), ಸಭಾಹಿತ್ (ಕಾರವಾರ), ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ (ಕೊಡಗು), ಜಿಲ್ಲಾ ಸ್ಕೌಟ್ ಸಂಘಟನಾ ಆಯುಕ್ತರಾದ ವಸಂತ ದೇವಾಡಿಗ (ದಕ್ಷಿಣ ಕನ್ನಡ), ಜಿಲ್ಲಾ ಗೈಡ್ ಆಯುಕ್ತರಾದ ವಿಮಲಾ ರಂಗಯ್ಯ (ದಕ್ಷಿಣ ಕನ್ನಡ), ಫೆಲ್ಸಿ ಫೆರ್ನಾಂಡಿಸ್ (ದಕ್ಷಿಣ ಕನ್ನಡ- ಹೆಚ್ಚುವರಿ) ರಾಣಿ ಮಾಚಯ್ಯ (ಕೊಡಗು), ಜ್ಯೋತಿ ಜಿ. ಪೈ (ಉಡುಪಿ), ಜಿಲ್ಲಾ ಗೈಡ್ ಸಂಘಟನಾ ಆಯುಕ್ತೆ ಸುನೀತಾ, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಶಾಂತರಾಮ, ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತೆ ಜಯಶ್ರೀ ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top